ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹42 ಕೋಟಿ ಮಂಜೂರು: ತಂಗಡಗಿ

| Published : Oct 17 2024, 12:50 AM IST

ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹42 ಕೋಟಿ ಮಂಜೂರು: ತಂಗಡಗಿ
Share this Article
  • FB
  • TW
  • Linkdin
  • Email

ಸಾರಾಂಶ

ಕನಕಗಿರಿಯಲ್ಲಿ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹೪೨ ಕೋಟಿ ಅನುದಾನ ನೀಡಲು ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದ್ದು, ಈ ಕಾಮಗಾರಿಯ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಸಚಿವ

ಕನ್ನಡಪ್ರಭ ವಾರ್ತೆ ಕನಕಗಿರಿ

ಕನಕಗಿರಿಯಲ್ಲಿ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹೪೨ ಕೋಟಿ ಅನುದಾನ ನೀಡಲು ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದ್ದು, ಈ ಕಾಮಗಾರಿಯ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಬುಧವಾರ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಪತ್ರಕರ್ತರ ಜತೆ ಮಾತನಾಡಿದರು. ತಾಲೂಕಿನ ಜನತೆ ಹುಬ್ಬಳ್ಳಿ, ಬಳ್ಳಾರಿ, ಬೆಂಗಳೂರಿನ ಆಸ್ಪತ್ರೆಗೆ ಹೋಗುವುದು ಅನಿವಾರ್ಯವಾಗಿತ್ತು. ಈಗ ನೂರು ಹಾಸಿಗೆ ಆಸ್ಪತ್ರೆ ಮೇಲ್ದರ್ಜೆಗೇರಿದ್ದರಿಂದ ಮುಂದಿನ ದಿನಮಾನಗಳಲ್ಲಿ ಉತ್ತಮ ಚಿಕಿತ್ಸೆ ಇಲ್ಲಿಯೇ ಸಿಗಲಿದೆ. ಆಸ್ಪತ್ರೆ ನಿರ್ಮಾಣಕ್ಕೆ ನಮ್ಮ ಸರ್ಕಾರ ₹೪೨ ಕೋಟಿ ಅನುದಾನ ನೀಡಲಿದೆ. ಮುಂಬರುವ ದಿನಗಳಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಕನಕಗಿರಿ-ಕಾರಟಗಿ ಆಸ್ಪತ್ರೆಗೆ ಮೇಲ್ದರ್ಜೆಯಾಗಿ ಘೋಷಣೆಯಾಗಲಿದ್ದು, ಆಸ್ಪತ್ರೆ ನಿರ್ಮಾಣಕ್ಕೆ ಕಲ್ಮಠದ ಚನ್ನಮಲ್ಲಸ್ವಾಮಿಗಳು ಭೂಮಿ ನೀಡಿದ್ದಾರೆ ಎಂದರು.

₹೨೫ ಕೋಟಿ ವೆಚ್ಚದಲ್ಲಿ ಕನಕಗಿರಿಯಿಂದ ನವಲಿ ಸೀಮಾ ವ್ಯಾಪ್ತಿಯವರೆಗೆ ರಸ್ತೆ ಅಭಿವೃದ್ಧಿ, ₹೮೭ ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಪಟ್ಟಣದ ನಿವಾಸಿ ಸೆಮ್ಸ್ ತಬರೇಜ್ ಅವರ ಜಮೀನಿನಲ್ಲಿ ಮೂರು ಎಕರೆ ಪ್ರದೇಶದಲ್ಲಿ ಪ್ರಜಾ ಸೌಧ ನಿರ್ಮಾಣ ಹಾಗೂ ೧ನೇ ವಾರ್ಡಿನಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ್ದೇನೆ ಎಂದು ಸಚಿವ ತಂಗಡಗಿ ತಿಳಿಸಿದರು.

ಇನ್ನೂ ಜರ‍್ಹಾಳ ಹಾಗೂ ಗೌರಿಪುರ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕೆ ತಲಾ ₹೪ ಕೋಟಿ ಬಿಡುಗಡೆಯಾಗಿದೆ. ಮೇಲ್ದರ್ಜೇಗೇರಿದ ಗಂಗಾವತಿ ಉಪವಿಭಾಗ ಆಸ್ಪತ್ರೆ ಅಭಿವೃದ್ಧಿ ಹಾಗೂ ಸಲಕರಣೆಗಳ ಖರೀದಿಗೆ ₹೧೬ ಕೋಟಿ ಮಂಜೂರಾಗಿದೆ. ಇಲ್ಲಿನ ಐತಿಹಾಸಿಕ ಪ್ರಸಿದ್ಧ ಶ್ರೀ ಕನಕಾಚಲಪತಿ ದೇವಸ್ಥಾನದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.ತಹಸೀಲ್ದಾರ ವಿಶ್ವನಾಥ ಮುರುಡಿ, ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯರಾದ ಶರಣೇಗೌಡ, ಅನಿಲ ಬಿಜ್ಜಳ, ರಾಜಸಾಬ ನಂದಾಪೂರ, ಕೆಡಿಪಿ ಸದಸ್ಯ ನಾಗಪ್ಪ ಹುಗ್ಗಿ, ಪ್ರಮುಖರಾದ ವೀರೇಶ ಸಮಗಂಡಿ, ಸಿದ್ದಪ್ಪ ನಿರ್ಲೂಟಿ, ಶರಣಪ್ಪ ಭತ್ತದ, ರವಿ ಪಾಟೀಲ್, ಟಿ.ಜೆ. ರಾಮಚಂದ್ರ, ಹೊನ್ನೂರಸಾಬ ಉಪ್ಪು, ವೈ.ಎಂ. ದೇವರಾಜ್, ಶಾಂತಪ್ಪ ಬಸರಿಗಿಡ, ಗಂಗಾಧರ ಚೌಡ್ಕಿ, ಸಣ್ಣ ರಾಮಣ್ಣ ಬ್ಯಾಳಿ ಇತರರಿದ್ದರು.