ತುಮಕೂರು: ಜಿಲ್ಲೆಯ 4,1999 ಅಂಗನವಾಡಿ ಕೇಂದ್ರಗಳು ಮತ್ತು 4,617 ಶಾಲಾ ಹಾಗೂ ಕಾಲೇಜುಗಳು ಸೇರಿದಂತೆ ಒಟ್ಟು 5,06,582 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೇಳಿದರು.

ಮಂಗಳವಾರ ಕ್ಯಾತ್ಸಂದ್ರದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಚಾರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಣ್ಣಿನಿಂದ ಹರಡುವ ಜಂತುಹುಳುಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಫೆಬ್ರವರಿ 10ರಂದು ದೇಶಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಭಾರತದಲ್ಲಿ 1 ರಿಂದ 19 ವರ್ಷದ ವಯಸ್ಸಿನ ಸುಮಾರು 2 ಕೋಟಿ ಮಕ್ಕಳು ಮಣ್ಣಿನಿಂದ ಹರಡುವ ಜಂತುಹುಳು ಬಾಧೆಯಿಂದ ಬಳಲುತ್ತಿದ್ದು, ಇದರಿಂದ ರಕ್ತಹೀನತೆ, ಪೌಷ್ಠಿಕಾಂಶ ಕೊರತೆ, ನಿಶಕ್ತಿ, ದೇಹದ ತೂಕ ಕಡಿಮೆಯಾಗುವುದು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ.

ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲಾ–ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಧಿಕಾರಿ ಡಾ.ಮೋಹನ್ ಸಿ.ಆರ್., ಬಿಇಓ ಹನುಮಂತಪ್ಪ, ತಾಲೂಕು ಆರೋಗ್ಯಧಿಕಾರಿ ಲಕ್ಷ್ಮಿಕಾಂತ್, ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಗನಾಥ್ ಹಾಗೂ ಆರ್.ಬಿ.ಎಸ್.ಕೆ ತಂಡದವರು ಸೇರಿದಂತೆ ಮತ್ತಿತರರು ಇದ್ದರು.