೫ ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ. ರವಿಕುಮಾರ್ ಚಾಲನೆ

| Published : Mar 14 2024, 02:01 AM IST / Updated: Mar 14 2024, 02:02 AM IST

ಸಾರಾಂಶ

ಹೊಸಹಳ್ಳಿ ಗುರುಮಠ ದೇವಾಲಯಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ೨ ಲಕ್ಷ ರು. ನೀಡಲಾಗಿದೆ. ಮಂಡ್ಯ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗಾಗಿ ೧.೬೦ ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇತಿಹಾಸದಲ್ಲೇ ಇಷ್ಟು ಪ್ರಮಾಣದ ಅನುದಾನವನ್ನು ದೇವಾಲಯಗಳಿಗೆ ಬಿಡುಡಗೆ ಮಾಡಿರಲಿಲ್ಲ. ನಮ್ಮ ಸರ್ಕಾರ ಮಾಡಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ನಗರದಲ್ಲಿರುವ ರಸ್ತೆಗಳ ಅಭಿವೃದ್ಧಿಗಾಗಿ ೫ ಕೋಟಿ ರು. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೀಘ್ರ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ನಗರದ ತಾವರೆಗೆರೆ ಬಡಾವಣೆಯ ಮುಖ್ಯರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಂಡ್ಯ ನಗರದ ಒಳಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಈ ಬಗ್ಗೆ ನಗರಾಭಿವೃದ್ಧಿ ಸಚಿವರಿಗೆ ೨೦೦ ಕೋಟಿ ರು. ಪ್ರಸ್ತಾವನೆ ಸಲ್ಲಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಮೊದಲ ಹಂತವಾಗಿ ೧೦೦ ಕೋಟಿ ರು. ಹಾಗೂ ೨ನೇ ಹಂತದಲ್ಲಿ ೧೦೦ ಕೋಟಿ ರು. ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಹಳೆಯ ಪೈಪ್‌ಗಳನ್ನು ತೆಗೆದು ಹೊಸದಾಗಿ ಅಳವಡಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದರು.

ಹೊಸಹಳ್ಳಿ ಗುರುಮಠ ದೇವಾಲಯಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ೨ ಲಕ್ಷ ರು. ನೀಡಲಾಗಿದೆ. ಮಂಡ್ಯ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗಾಗಿ ೧.೬೦ ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇತಿಹಾಸದಲ್ಲೇ ಇಷ್ಟು ಪ್ರಮಾಣದ ಅನುದಾನವನ್ನು ದೇವಾಲಯಗಳಿಗೆ ಬಿಡುಡಗೆ ಮಾಡಿರಲಿಲ್ಲ. ನಮ್ಮ ಸರ್ಕಾರ ಮಾಡಿದೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು ಮಾತನಾಡಿ, ಶಾಸಕರು ನಗರದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದಾರೆ. ಮುಖ್ಯ ರಸ್ತೆಗಳನ್ನೂ ಕೈಗೆತ್ತಿಕೊಂಡು ಹಂತ ಹಂತವಾಗಿ ಅಭಿವೃದ್ಧಿಪಡಿಸಬೇಕು. ನಾವೂ ಸಹ ಅವರಿಗೆ ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡುವುದಾಗಿ ತಿಳಿಸಿದರು.

ನಗರದ ವಿವಿಧೆಡೆ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಗರಾಭಿವೃದ್ಧಿ ಯೋಜನಾಧಿಕಾರಿ ತುಷಾರಮಣಿ, ನಗರಸಭೆ ಆಯುಕ್ತ ಆರ್.ಮಂಜುನಾಥ್, ಎಇಇ ರುದ್ರೇಗೌಡ, ನಗರಸಭೆ ಸದಸ್ಯರಾದ ಎಸ್.ಮಂಜು, ಪವಿತ್ರ ಬೋರೇಗೌಡ, ಶ್ರೀಧರ್, ಪೂರ್ಣಿಮಾ, ನಯೀಂ, ಗೀತಾ, ಟಿ.ಕೆ. ರಾಮಲಿಂಗು ಇತರರಿದ್ದರು.