ಸಾರಾಂಶ
ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವಿಗಿಡಾದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರು. ಪರಿಹಾರ ನೀಡಬೇಕು ಎಂದು ಸಿಐಟಿಯು ಆಗ್ರಹಿಸಿದೆ.
ಕನ್ನಡಪ್ರಭ ವಾರ್ತೆ ಮಂಗಳೂರುನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವಿಗಿಡಾದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರು. ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಇಲಾಖಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೇಂದ್ರ ಕಾರ್ಮಿಕ ಸಂಘಟನೆಯಾದ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಎಚ್ಚರಿಕೆ ನೀಡಿದರು.
ಮಣ್ಣು ಕುಸಿತ ಘಟನೆಗೆ ನೇರ ಕಾರಣವಾದ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವನ್ನು ಖಂಡಿಸಿ ಹಾಗೂ ಕಾರ್ಮಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳದೆ ಕಾನೂನುಗಳನ್ನು ಉಲ್ಲಂಘಿಸುತ್ತಿರುವ ಬಿಲ್ಡರ್ಗಳ ಗುತ್ತಿಗೆದಾರಿಗೆ ಮೂಗುದಾರ ತೊಡಿಸಬೇಕಾದ ಕಾರ್ಮಿಕ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿ ಸಿಐಟಿಯು ಹಾಗೂ ಕಟ್ಟಡ ಕಾರ್ಮಿಕರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಸೋಮವಾರ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಮಾತನಾಡಿದರು.ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಮುಖಂಡರಾದ ಬಿ.ಎಂ.ಭಟ್, ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಸಿಐಟಿಯು ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ಕಟ್ಟಡ ಕಾರ್ಮಿಕರ ಸಂಘಟನೆಯ ಮುಖಂಡರಾದ ಜಯಂತ ನಾಯಕ್ ಮಾತನಾಡಿದರು.