ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 5587 ಪ್ರಕರಣ ಇತ್ಯರ್ಥ

| Published : Sep 16 2025, 12:04 AM IST

ಸಾರಾಂಶ

ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್‌ ವಸೂಲಾತಿ ಪ್ರಕರಣ, ಚೆಕ್‌ ಬೌನ್ಸ್‌, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು ₹4,46,56,310 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.

ಬ್ಯಾಡಗಿ: ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ಸೆ. 13ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ₹4.46 ಕೋಟಿಗೂ ಅಧಿಕ ಮೊತ್ತದ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 5587 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.

ಈ ಕುರಿತು ಪ್ರಕಟಣೆ ನೀಡಿರುವ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಅಮೊಲ್ ಜೆ. ಹಿರಿಕುಡೆ ಅವರು, ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್‌ ವಸೂಲಾತಿ ಪ್ರಕರಣ, ಚೆಕ್‌ ಬೌನ್ಸ್‌, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು ₹4,46,56,310 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.

5587 ಪ್ರಕರಣ ಇತ್ಯರ್ಥ: ಹಿರಿಯ ದಿವಾಣಿ ನ್ಯಾಯಾಲಯದಲ್ಲಿನ 167 ಬಾಕಿ ಪ್ರಕರಣ ಹಾಗೂ 2640 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 2807, ಕಿರಿಯ ದಿವಾಣಿ ನ್ಯಾಯಾಲಯದಲ್ಲಿನ 196 ಬಾಕಿ ಪ್ರಕರಣ ಹಾಗೂ 2584 ವ್ಯಾಜ್ಯಪೂರ್ವ ಸೇರಿದಂತೆ ಒಟ್ಟು 2780 ಪ್ರಕರಣಗಳು ಇತ್ಯರ್ಥಗೊಂಡವು.

ಈ ವೇಳೆ ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹಾಗೂ ಕಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಸೇರಿದಂತೆ ಹಿರಿಯ ಕಿರಿಯ ವಕೀಲರು ಹಾಗೂ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಮತ್ತು ಪಕ್ಷಗಾರರು ಉಪಸ್ಥಿತರಿದ್ದರು.ಲೋಕ ಅದಾಲತ್‌ನಲ್ಲಿ 84,524 ಪ್ರಕರಣಗಳ ಇತ್ಯರ್ಥ

ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 98,260 ಪ್ರಕರಣಗಳಲ್ಲಿ 84,524 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹43,70,49,048 ಮೊತ್ತದ ರಾಜಿಯಾಗಿದೆ.

ಆರು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜಿ ಮಾಡಿಕೊಂಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪ ಎನ್. ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 5,290 ಪ್ರಕರಣಗಳ ಪೈಕಿ 4,370 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹21,68,35,14 ರಾಜಿಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 92,970 ಪ್ರಕರಣಗಳಲ್ಲಿ 82,154 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹22,02,13,900 ಮೊತ್ತದ ರಾಜಿಯಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲೆಯ ಎಲ್ಲ ತಾಲೂಕು ನ್ಯಾಯವಾದಿಗಳ ಸಂಘ, ಹಾವೇರಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು, ಇತರೆ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ತುಂಬಾ ಯಶಸ್ವಿಯಾಗಿ ಜರುಗಿದೆ ಎಂದು ತಿಳಿಸಿದ್ದಾರೆ.