ಸಾರಾಂಶ
೧೮೬ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ೧೮೩.೨ ಅಡಿ ನೀರು ಸಂಗ್ರಹಬಾಗಿದ್ದು, ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗಿದ್ದು, ರೈತರ ಮೊಗದಲ್ಲಿ ಹರ್ಷ ಮನೆ ಮಾಡಿದೆ.
ಕನ್ನಡಪ್ರಭ ವಾರ್ತೆ ಭದ್ರಾವತಿ
ಇಲ್ಲಿನ ಜೀವನದಿ ಭದ್ರಾ ನದಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗುತ್ತಿದ್ದು, ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ಜಲಾಶಯದ ೪ ಕ್ರೆಸ್ಟ್ ಗೇಟ್ಗಳ ಮೂಲಕ ಸುಮಾರು ೬ ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ. ಇದರಿಂದಾಗಿ ಭದ್ರೆ ಮೈತುಂಬಿ ಹರಿಯುತ್ತಿದ್ದು, ಸುತ್ತಮುತ್ತಲ ಜನರು ಕಣ್ತುಂಬಿಕೊಳ್ಳಲು ಜಲಾಶಯದ ಬಳಿ ಧಾವಿಸುತ್ತಿದ್ದಾರೆ. ಜಲಾಶಯದ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗರಿಷ್ಠ ೧೮೬ ಅಡಿ ಎತ್ತರದ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ೬ರ ಸಮಯಕ್ಕೆ ೧೮೩.೨ ಅಡಿ ನೀರು ಸಂಗ್ರಹವಾಗಿದೆ. ಪೂರ್ಣ ಭರ್ತಿಯಾಗಲು ಕೇವಲ ೨.೮ ಅಡಿ ಬಾಕಿ ಉಳಿದಿದ್ದು, ಜಲಾಶಯ ಅಪಾಯದಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ೬ ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆಗೊಳಿಸಲಾಗುತ್ತಿದೆ. ಪ್ರಸ್ತುತ ಜಲಾಶಯ ೨೦,೭೭೪ ಕ್ಯೂಸೆಕ್ ಒಳಹರಿವು ಹೊಂದಿದ್ದು, ಈಗಾಗಲೇ ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಯಲ್ಲಿ ನೀರು ಹರಿಸಲಾಗುತ್ತಿದೆ. ಇದು ರೈತರಲ್ಲಿ ಖುಷಿ ತಂದಿದೆ. ಭದ್ರಾ ಬಲಡಂದೆ ನಾಲೆಗೆ ೪೫೮ ಕ್ಯೂಸೆಕ್ ಹಾಗೂ ಎಡದಂಡೆ ನಾಲೆಗೆ ೮೩ ಕ್ಯೂಸೆಕ್ ಹರಿಸಲಾಗುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ.ಕಳೆದ ವರ್ಷ ಜಲಾಶಯದ ನೀರಿನ ಮಟ್ಟ ೧೬೧.೬ ಅಡಿ ಇದ್ದು, ಈ ಬಾರಿ ೨೨ ಅಡಿ ನೀರು ಸಂಗ್ರಹವಾಗಿದೆ. ಜುಲೈ ಅಂತ್ಯದಲ್ಲಿ ಜಲಾಶಯ ಭರ್ತಿಯಾಗಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ.