ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ಹೇಳಿದರು.
ಕಾರವಾರ: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ 3,12,818 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಅಥವಾ ಮೂರು ದಿನಗಳಲ್ಲಿ ಒಟ್ಟು ₹62,56,36,000 ಗಳ ಮೊತ್ತವನ್ನು ಜಮೆ ಮಾಡಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ಹೇಳಿದರು.
ಕಾರವಾರದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಒಂದೇ ಫಲಾನುಭವಿ ಹಲವು ಖಾತೆಗಳನ್ನು ಹೊಂದಿರುವ ಸಾಧ್ಯತೆ ಇರುವ ಹಿನ್ನೆಲೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ 26,986 ಫಲಾನುಭವಿಗಳ ಖಾತೆಗಳನ್ನು ಮರುಪರಿಶೀಲನೆ ನಡೆಸಲಾಗಿದೆ. ಈ ತಪಾಸಣೆಯಲ್ಲಿ ಜಿಲ್ಲೆಯ ಯಾವುದೇ ಫಲಾನುಭವಿಯ ಖಾತೆಗೆ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಕಂಡುಬಂದಿಲ್ಲ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆಗೆ ಆಗಮಿಸುವ ಅಧಿಕಾರಿಗಳಿಗೆ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು. ಗೃಹಜ್ಯೋತಿ ಮರು ಪರಿಶೀಲನೆಗೆ ಬರುವ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ನಿರಾಕರಿಸುವ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ಮುಂದುವರಿಯುವುದು ಕಷ್ಟವಾಗಬಹುದು. ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಕಾರ್ಯ ಕೆಲವೆಡೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಚುರುಕುಗೊಳಿಸಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಮತ್ತಿತರರು ಇದ್ದರು.