ಸಾರಾಂಶ
ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕ ಸಂತೋಷ್ ಕುಮಾರ್ ಶೆಟ್ಟಿ ಬಿ. ಅವರು ಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕ ಸಂತೋಷ್ ಕುಮಾರ್ ಶೆಟ್ಟಿ ಬಿ. ಅವರು ಧ್ವಜಾರೋಹಣ ನೆರವೇರಿಸಿದರು.ನಂತರ ಮಾತನಾಡಿದ ಅವರು ದೇಶಸೇವೆ ಮಾಡಲು ಸೈನಿಕರಾಗಿ ಗಡಿ ರಕ್ಷಣೆ ಮಾಡುವುದೊಂದೇ ಮಾರ್ಗವಲ್ಲ, ಪ್ರತಿಯೊಬ್ಬರೂ ಸಂಸ್ಕಾರಯುತರಾಗಿ ಉತ್ತಮ ವ್ಯಕ್ತಿತ್ವವನ್ನು ರೂಢಿಸಿಕೊಂಡು ಗುರು ಹಿರಿಯರಿಗೆ ಗೌರವ ನೀಡಿದರೂ ಅದು ದೇಶಸೇವೆ. ಅಲ್ಲದೆ ನೀವು ಸೈನಿಕರಾಗಿ ಸೇವೆ ಸಲ್ಲಿಸಲು ಈಗ ಅಗ್ನಿವೀರ್ ಉತ್ತಮ ಅವಕಾಶಗಳನ್ನು ಸೃಷ್ಟಿಸಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ ಪಟೇಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮೂಡ್ಲಕಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ಅಬ್ದುಲ್ ಕರೀಮ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನಜೆ಼ಸ್, ಐಎಂಜೆ ಪದವಿ ಕಾಲೇಜಿನ ಉಪಪ್ರಾಂಶುಪಾಲ ಜಯಶೀಲ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಖಾರ್ವಿ ಉಪಸ್ಥಿತರಿದ್ದರು.ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯು ಆನ್-ಲೈನ್ ನಲ್ಲಿ ಏರ್ಪಡಿಸಿದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು ಹಾಗೂ ಮುಖ್ಯ ಅತಿಥಿ ಸಂತೋಷ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಐ ಎಂ ಜೆ ಸಂಸ್ಥೆಯ ಉಪನ್ಯಾಸಕ ವೃಂದದವರು, ಕಚೇರಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ಕಾರ್ಯಕ್ರಮವನ್ನು ಗಣಿತ ಉಪನ್ಯಾಸಕರಾದ ರಕ್ಷಿತಾ ಆರ್. ಅಡಿಗ ನಿರೂಪಿಸಿದರು.