ಮದ್ದೂರು:

ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯ ಶೇ.82ರಷ್ಟು ಪೂರ್ಣಗೊಂಡಿದೆ. ಉಳಿದಿರುವ ಕಾರ್ಯವನ್ನು ಇನ್ನೂ ನಾಲ್ಕೈದು ದಿನಗಳಲ್ಲಿ ಪೂರ್ಣಗೊಳಿಸಿ ಶೇ.100ರಷ್ಟು ಪ್ರಗತಿ ಸಾಧಿಸಲಾಗುವುದು ಎಂದು ತಹಸೀಲ್ದಾರ್ ಡಾ. ಶಿವಕುಮಾರ್ ಬಿರಾದಾರ್ ತಿಳಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಕಾರ್ಯದ ವೇಳೆ ಸುಮಾರು ಶೇ.6ರಷ್ಟು ಮತದಾರರು ಅನರ್ಹರು ಎಂಬುದು ಪತ್ತೆಯಾಗಿದೆ. ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಎಸ್‌ಐಆರ್ ಕಾರ್ಯ ಸುಗಮವಾಗಿ ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಗತ್ಯವಿರುವ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದಿರುವ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆ ಆಗಸ್ಟ್ 8ರಂದು ಮುಕ್ತಾಯಗೊಳ್ಳಲಿದೆ. ಬಳಿಕ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ ಸೇರಿದಂತೆ ಇತರ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ಗೊಂದಲ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕು. ಅವುಗಳನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.


ಆತಗೂರು ಹೋಬಳಿಯ ಬಹುವರ್ಷಗಳ ರೀ-ಸರ್ವೆ ಸಮಸ್ಯೆಯ ಕುರಿತು ಮಾತನಾಡಿದ ಅವರು, ಇದುವರೆಗೆ ಶೇ.70ರಷ್ಟು ಸಮಸ್ಯೆ ಬಗೆಹರಿದಿದೆ. ಉಳಿದ ಶೇ.30ರಷ್ಟು ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಶಿರಸ್ತೇದಾರ್ ರಾಘವೇಂದ್ರ, ಪವನ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಎಸ್ ಐ ಆರ್ ಮೂಲಕ ಚುನಾವಣೆ ಗೆಲ್ಲಲು ಕೇಂದ್ರ ಸರ್ಕಾರ ಹುನ್ನಾರ - ಸಂದೀಪ್

ಕನ್ನಡಪ್ರಭ ವಾರ್ತೆ ಮಂಡ್ಯಕೇಂದ್ರ ಸರ್ಕಾರ ಎಸ್‌ಐಆರ್ ಮೂಲಕ ವಾಮಮಾರ್ಗದಿಂದ ಚುನಾವಣೆಯಲ್ಲಿ ಗೆಲ್ಲಲು ಹುನ್ನಾರ ನಡೆಸುತ್ತಿದೆ ಎಂದು ಎಐಸಿಸಿ ಕಾರ್‍ಯದರ್ಶಿ ಸಂದೀಪ್ ಆರೋಪಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್‍ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಸ್‌ಐಆರ್‌ನಿಂದ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮಂಡ್ಯ ಜಿಲ್ಲೆ 8ನೇ ಸ್ಥಾನದಲ್ಲಿದೆ. ಬಿಎಲ್‌ಓಗಳು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ರೀತಿಯಲ್ಲಿ ಜಿಲ್ಲಾಡಳಿತ ಕ್ರಮ ವಹಿಸಿದೆ. ಜವಾಬ್ದಾರಿ ಹೊತ್ತಿರುವವರು ಸಂಪೂರ್ಣವಾಗಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಯಿಂದ ಯಾರೂ ವಂಚಿತರಾಗದಂತೆ ನೋಡಿಕೊಳ್ಳಬೇಕು. ಎಸ್‌ಐಆರ್ ದುರುಪಯೋಗವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮುಖಂಡರಾದ ಸಿ.ಎಂ.ದ್ಯಾವಪ್ಪಇತರರಿದ್ದರು.