ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನಲ್ಲಿ ಒಟ್ಟು 8818 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದು, ಈ ಪೈಕಿ 3909 ಗಂಡು, ಹಾಗೂ 4279 ಹೆಣ್ಣು ಮಕ್ಕಳಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಹೇಳಿದರು.ಬಸವೇಶ್ವರ ಶಿಕ್ಷಣ ಸಂಸ್ಥೆಯ ಪ.ಪೂ ಕಾಲೇಜು ಕಡಪಟ್ಟಿಯಲ್ಲಿ ಶುಕ್ರವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಟ್ಟು 25 ಪರೀಕ್ಷಾ ಕೇಂದ್ರ ಸಿದ್ಧಪಡಿಸಲಾಗಿದೆ. ರಬಕವಿ-ಬನಹಟ್ಟಿ, ತೇರದಾಳ ತಾಲೂಕಿನಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಿದ್ದು, 3414 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಮಖಂಡಿ ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಿದ್ದು, ನಗರದಲ್ಲಿ 10 ಹಾಗೂ ಗ್ರಾಮೀಣ ಭಾಗದಲ್ಲಿ 15 ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. 322 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂದು ವಿವರಣೆ ನೀಡಿದರು. 25 ಮುಖ್ಯ ಅಧೀಕ್ಷಕರು, 25 ಪ್ರಶ್ನೆಪತ್ರಿಕೆ ಪಾಲಕರು, 25 ಸ್ಥಾನಿಕ ಜಾಗೃತದಳ, 10 ಉಪಮುಖ್ಯ ಅಧೀಕ್ಷಕರು, 25 ವೆಬ್ ಕಾಸ್ಟಿಂಗ್ ವೀಕ್ಷಕರು, 10 ಮಾರ್ಗಾಧಿಕಾರಿಗಳು ಪ್ರಶ್ನೆಪತ್ರಿಕೆ ಸಾಗಿಸುವರು, 25 ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿದಂತೆ ಉಳಿದ ಸಿಬ್ಬಂದಿಯನ್ನು ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. 25 ಪರೀಕ್ಷಾ ಕೇಂದ್ರಗಳಿಗೆ ತಾಲೂಕು ಹಂತದ ಅಧಿಕಾರಿಗಳ ನೇತೃತ್ವದಲ್ಲಿ 5 ಜಾಗೃತ ದಳ ತಂಡ ನೇಮಿಸಲಾಗಿದೆ. ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಬಿಇಒ ತಂಡಗಳ ನೇತೃತ್ವ ವಹಿಸಲಿದ್ದಾರೆ. ಮಾ.18 ರಿಂದ ಏ.2ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ ಮಾಚಕನೂರ ಮಾತನಾಡಿದರು. ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಎ.ಆರ್ ತೇಲಿ ಮಾತನಾಡಿದರು.
ಗ್ರೇಡ್ 2 ತಹಸೀಲ್ದಾರ್ ಕೆ.ವೈ.ಬಿದರಿ ವೇದಿಕೆಯಲ್ಲಿದ್ದರು. ಶಿಕ್ಷಣ ಇಲಾಖೆ ಅಧಿಕಾರಿ ಸಂಗಮೇಶ ವಿಜಾಪೂರ, ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಭಾ ಕಾಂಬಳೆ ಪ್ರಾರ್ಥನಾಗೀತೆ ಹಾಡಿದರು. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕೆಪಿಟಿಸಿಎಲ್, ಶಿಕ್ಷಣ ಇಲಾಖೆಯ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಆರ್.ಎಸ್.ತಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.