ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯದ ಜೊತೆಗೆ ಆಧುನಿಕ ಶಿಕ್ಷಣಕ್ಕೆ ಸಹಾಯವಾಗುವಂತೆ ಸುಮಾರು ₹90 ಕೋಟಿಗೂ ಹೆಚ್ಚು ಸಿಎಸ್ ಆರ್ ಅನುದಾನವನ್ನು ಬಳಕೆ ಮಾಡಿಕೊಂಡು ಮಲ್ಟಿ ಮೀಡಿಯಾ ಸೆಂಟರ್ಗಳನ್ನು ಆರಂಭಿಸುವ ಮೂಲಕ ಪ್ರತಿ ಮನೆಯ ಮಕ್ಕಳಿಗೆ ಶಿಕ್ಷಣದ ಬೆಳಕನ್ನು ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿರುವುದಾಗಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಗಂಗಾಮತ ಬೀದಿಯಲ್ಲಿ ನಾರಾಯಣ ಹೃದಯಾಲಯ ವತಿಯಿಂದ ಸಿಎಸ್ ಆರ್ ಅನುದಾನದಡಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 12 ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನನ್ನ ಕನಸಿನ ಮಳವಳ್ಳಿಯ ಶಿಕ್ಷಣದಲ್ಲಿ ಯಾರು ಸರ್ಕಾರಿ ಶಾಲೆ ಬಗ್ಗೆ ಬೆಟ್ಟು ಮಾಡಿ ತೋರದ ರೀತಿಯಲ್ಲಿ ಇನ್ನೆರಡು ತಿಂಗಳಲ್ಲಿ ಸರ್ವಾಂಗೀಣವಾಗಿ ಅಭಿವೃದ್ದಿಗೊಳಿಸುವುದಾಗಿ ಭರವಸೆ ನೀಡಿದರು.
ಸಾರ್ವಜನಿಕ ಜವಾಬ್ದಾರಿ ಸಮುದಾಯ ಅಭಿವೃದ್ಧಿಯ ಅನುದಾನವನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿರುವುದು ಕರ್ನಾಟಕ ರಾಜ್ಯದಲ್ಲಿ ಮಾತ್ರ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ. ರಾಜ್ಯದಲ್ಲಿಯೇ ಹಿಂದುಳಿದ ತಾಲೂಕು ಮಳವಳ್ಳಿಯಲ್ಲಿ ವಿಶೇಷವಾಗಿ ಶಿಕ್ಷಣಕ್ಕೆ ಒತ್ತು ನೀಡಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಡಿಟಲೀಕರಣಗೊಳಿಸಿ ಆಧುನಿಕ ಶಿಕ್ಷಣದ ಮೆರಗನ್ನು ಪಡೆದುಕೊಳ್ಳುವಂತೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.ಗ್ರಾಮೀಣ ವಿದ್ಯಾರ್ಥಿಗಳು ಪಟ್ಟಣದ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುವ ರೀತಿ ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗೆ ಸೇರಿಸಬೇಕೆಂಬ ಸನ್ನಿವೇಶ ಇನ್ನೆರಡು ತಿಂಗಳಲ್ಲಿ ಸೃಷ್ಠಿಯಾಗಲಿದೆ ಎಂದು ಭವಿಷ್ಯ ನುಡಿದರು.
ತಾಲೂಕಿನ ಬೆಂಡರವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೆಸ್ಲೆ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಸಿಎಸ್ ಆರ್ ಅನುದಾನದಡಿ ₹1.08 ಕೋಟಿ ವೆಚ್ಚದಲ್ಲಿ ಹೊಸ ಕೊಠಡಿಗಳು, ಪಟ್ಟಣದ ಕೋಟೆ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹84 ಲಕ್ಷ ವೆಚ್ಚದಲ್ಲಿ ಹೊಸ ಕೊಠಡಿಗಳು ಹಾಗೂ ನವೀಕರಣ ಕಾಮಗಾರಿ, ತಾಲೂಕಿನ ಕಾಳಕೆಂಪನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹79 ಲಕ್ಷ ವೆಚ್ಚದಲ್ಲಿ ಹೊಸ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ನೆಸ್ಲೆ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಶ್ರೀನಿವಾಸ್ ಮೂರ್ತಿ, ಸಂದೀಪ್, ನಾರಾಯಣ ಹೃದಯಾಲಯದ ವಿಜಯ್ ಕುಮಾರ್ ಸಿಂಗ್, ಸತೀಶ್, ಪಾರ್ಥಸಾರಥಿ, ಬಿಇಒ ವಿ.ಇ.ಉಮಾ, ಲೋಕೋಪಯೋಗಿ ಇಲಾಖೆಯ ಎಇಇ ಎ.ಎಂ.ಸೋಮಶೇಖರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಬಿ.ಟಿ.ರಾಮಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್(ವಿಶ್ವ), ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಮಾಜಿ ಸದಸ್ಯ ಶಿವಲಿಂಗಯ್ಯ ಪಾಲ್ಗೊಂಡಿದ್ದರು.