ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ದೇಶಹಳ್ಳಿ ಮದ್ದೂರಮ್ಮನ ಕೆರೆ ವ್ಯಾಪ್ತಿಯ ಕೆಮ್ಮಣ್ಣು ನಾಲೆ ಆಧುನೀಕರಣಕ್ಕಾಗಿ ಸರ್ಕಾರ 90 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಶೀಘ್ರ ಕಾಮಗಾರಿ ಪ್ರಾರಂಭಗೊಂಡು ಮುಂದಿನ ಐದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮದ್ದೂರು ಕೆರೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಜನಪ್ರತಿನಿಧಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳ್ಳುವವರೆಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ರೈತರು ಯಾವುದೇ ಬೆಳೆ ಹಾಕದೆ ಕಾಮಗಾರಿ ಪೂರ್ಣಗೊಳ್ಳಲು ಸಹಕಾರ ನೀಡುವಂತೆ ಮನವಿ ಮಾಡಿದರು.
ಕಳೆದ ಕೆಲವು ವರ್ಷಗಳಿಂದ ಕೆಮ್ಮಣ್ಣುನಾಲೆ ಆಧುನೀಕರಣಗೊಳ್ಳದ ಕಾರಣ ಸಾಕಷ್ಟು ನೀರು ಪೋಲಾಗಿ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪದೇ ಬೆಳೆ ಬೆಳೆಯಲು ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ತೀವ್ರ ಒತ್ತಡ ಹಾಕಿ ನಾಲೆ ಆಧುನೀಕರಣಕ್ಕೆ ಕಾವೇರಿ ನೀರಾವರಿ ನಿಗಮದ ಮೂಲಕ 90 ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿದ್ದೇನೆ ಎಂದರು.ಮದ್ದೂರು ಕೆರೆಯಿಂದ ಚಾಕನಕೆರೆ ಗ್ರಾಮದವರೆಗೆ 22 ಕಿ.ಮೀ ವ್ಯಾಪ್ತಿಯಲ್ಲಿ ಕೆಮ್ಮಣ್ಣುನಾಲೆ ಇದೆ. ಅಲ್ಲಿಯವರೆಗೆ ನಾಲಾ ಲೈನಿಂಗ್ ಕಾಮಗಾರಿ ಹಾಗೂ ಎರಡು ಬದಿಗಳಲ್ಲಿ ಬಂಡಿ ರಸ್ತೆ ನಿರ್ಮಾಣವಾಗಲಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಅಮೃತ್ ಕನ್ಸ್ಟ್ರಕ್ಷನ್ಸ್ ಕಂಪನಿ ಗುತ್ತಿಗೆ ಪಡೆದುಕೊಂಡಿದೆ ಎಂದು ಹೇಳಿದರು.
ಮದ್ದೂರು ಪಟ್ಟಣ ವ್ಯಾಪ್ತಿಯ ಕೆಎಸ್ ಆರ್ ಟಿಸಿ ಡಿಪೋ ಬಳಿಯಿಂದ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯವರೆಗೆ ನಾಲೆ ಮೇಲ್ಭಾಗದಲ್ಲಿ ನಿರ್ಮಾಣವಾಗಲಿದೆ. ಪಟ್ಟಣ ವ್ಯಾಪ್ತಿಯಲ್ಲಿ ಒಳಚರಂಡಿ ನೀರು ಕೆಮ್ಮಣ್ಣು ನಾಲೆ ಸೇರಿ ನೀರು ಕಲುಷಿತಗೊಳ್ಳುತ್ತಿದೆ. ಈ ಸಮಸ್ಯೆ ನಿವಾರಣೆಗೂ ಸಹ 16.50 ಕೋಟಿ ರು. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ನಂಜುಂಡೇಗೌಡ, ಸಹಾಯಕ ಇಂಜಿನಿಯರ್ ನಾಗರಾಜು, ಗ್ರೇಡ್ 2 ತಹಸೀಲ್ದಾರ್ ಸೋಮಶೇಖರ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಪುರಸಭಾ ಸದಸ್ಯ ಸಚಿನ್, ಮುಖಂಡರಾದ ನ.ಲಿ.ಕೃಷ್ಣ, ಚನ್ನವೀರ ಗೌಡ, ಚನ್ನಸಂದ್ರ ಲಕ್ಷ್ಮಣ , ಸಿದ್ದರಾಮು, ರುದ್ರೇಶ, ಉಮೇಶ್ ಮತ್ತಿತರರು ಇದ್ದರು.