ಕನ್ನಡಪ್ರಭ ವಾರ್ತೆ ನಾಗಮಂಗಲ
ಆರೋಗ್ಯಕರ ಜೀವನಕ್ಕೆ ಸ್ವಚ್ಛ ಪರಿಸರ ಅಗತ್ಯ. ಪರಿಸರ ಉಳಿದರೆ ನಮ್ಮ ಮುಂದಿನ ಭವಿಷ್ಯ ಸುರಕ್ಷಿತವಾಗಿರುತ್ತದೆ ಎಂದು ಬಿಜಿಎಸ್ ಪಿಯು ಕಾಲೇಜು ಪ್ರಾಂಶುಪಾಲೆ ಟಿ.ಎನ್. ಶಿಲ್ಪ ಅಭಿಪ್ರಾಯಪಟ್ಟರು.ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಎನ್ಎಸ್ಎಸ್ ಘಟಕ-10ರ ವತಿಯಿಂದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳ 57ನೇ ಜನ್ಮದಿನದ ಪ್ರಯುಕ್ತ ಪರಿಸರ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಜನ್ಮ ದಿನವನ್ನು ದೀಕ್ಷಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಯ ನೇತಾರ, ಜ್ಞಾನ-ವಿಜ್ಞಾನ-ತಂತ್ರಜ್ಞಾನದ ಹರಿಕಾರ, ಪರಿಸರ ಪ್ರೇಮಿ, ಆಧ್ಯಾತ್ಮಿಕ ರಾಯಭಾರಿ, ಶಿಕ್ಷಣ ಸಂತ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಆದರ್ಶಗಳನ್ನು ಪಾಲಿಸುವಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಮತ್ತು ಗುರುಗಳ ಆಶಯವು ವಿವಿಧ ಪ್ರತಿಫಲನೀಡುವ ವೃಕ್ಷವಾಗಲಿ ಎಂಬ ಸಂಕಲ್ಪದೊಂದಿಗೆ ಸಾಕಾರಗೊಳಿಸಿದ್ದೇವೆ ಎಂದರು.ಪರಿಸರ ಉಳಿದರೆ ಮಾತ್ರ ಜೀವಸಂಕುಲಗಳು ಉಳಿಯುತ್ತವೆ. ಅಳಿವಿನಂಚಿನಲ್ಲಿರುವ ಜೀವ ಸಂಕುಲಗಳನ್ನು ರಕ್ಷಿಸಿ ಉಳಿಸಲು ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಹೊಣೆ ನಮ್ಮದಾಗಬೇಕು. ನಮ್ಮ ಸುತ್ತ ಮುತ್ತಲ ಪರಿಸರ ಉತ್ತಮವಾಗಿದ್ದರೆ ಮಾತ್ರ ಆರೋಗ್ಯಕರ ಜೀವನ ನಡೆಸಬಹುದು. ಹಾಗಾಗಿ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ಕೊಟ್ಟು ಹೆಚ್ಚು ಗಿಡ ಮರಗಳನ್ನು ಬೆಳೆಸುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಈ ವೇಳೆ ಮಾಡೆಲ್ ಪಬ್ಲಿಕ್ ಶಾಲೆ ಪ್ರಾಂಶುಪಾಲ ವಿ.ಪುಟ್ಟಸ್ವಾಮಿ, ಎನ್ಎಸ್ಎಸ್ ಘಟಕ -10ರ ಕಾರ್ಯಕ್ರಮಾಧಿಕಾರಿ ಸಿ.ಎಲ್. ಶಿವಣ್ಣ, ಸಹಾಯಕ ಪ್ರಾಧ್ಯಾಪಕ ಡಾ.ಎ.ಸಿ.ದೇವಾನಂದ್ ಸೇರಿದಂತೆ ಹಲವರು ಇದ್ದರು.