ಕನ್ನಡಪ್ರಭ ವಾರ್ತೆ ಕೊರಟಗೆರೆ0
ಕಲಿಕೆ ಎಂಬುದು ಹುಟ್ಟಿನಿಂದ ಸಾವಿನವರೆಗೂ ಸಾಗುವ ನಿರಂತರ ಪ್ರಕ್ರಿಯೆಯಾಗಿದ್ದು, ಮಕ್ಕಳು ಪ್ರತಿಯೊಂದು ವಿಷಯದಲ್ಲೂ ಕಲಿಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಸಂಸ್ಕಾರ ಶಿಬಿರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗಾಗಿ ಅನೇಕ ಕಷ್ಟಗಳನ್ನು ಅನುಭವಿಸುತ್ತಾರೆ. ಹೀಗಾಗಿ ಮಕ್ಕಳು ಪೋಷಕರು ತಮ್ಮಿಂದ ಏನು ನಿರೀಕ್ಷಿಸುತ್ತಾರೆ ಎಂಬುದನ್ನು ಅರಿತು ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಹಣ ಗಳಿಕೆ ಅಥವಾ ಉದ್ಯೋಗಕ್ಕಿಂತಲೂ ಸಂಸ್ಕಾರಯುತ ಬದುಕು ಮುಖ್ಯವಾಗಿದೆ.ಆ ದಿಕ್ಕಿನಲ್ಲಿ ವಿದ್ಯಾಭ್ಯಾಸ ಮಾಡುವುದು ಜೀವನದ ನಿಜವಾದ ಸಾಧನೆಗೆ ದಾರಿ ಮಾಡಿಕೊಡುತ್ತದೆ. ಸರ್ಕಾರಗಳ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನ ಬಳಸಿಕೊಂಡು ಉನ್ನತ ಸ್ಥಾನದ ಗುರಿ ತಲುಪಬೇಕು ಎಂದು ಹೇಳಿದರು.
ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ಮಾತನಾಡಿ, ಕಳೆದ ೫ ವರ್ಷಗಳಿಂದ ಮಠದಲ್ಲಿ ಸಂಸ್ಕಾರ ಶಿಬಿರವನ್ನು ನಿರಂತರವಾಗಿ ಆಯೋಜಿಸಲಾಗುತ್ತಿದ್ದು, ಈ ಬಾರಿ ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಚಾರವಾಗಿದೆ. ರಾಜ್ಯದ ವಿವಿಧ ಮಠಗಳ ಮಠಾಧೀಶರು ಮಕ್ಕಳಿಗೆ ಸಂಸ್ಕಾರದ ಮೌಲ್ಯಗಳನ್ನು ಬೋಧಿಸುತ್ತಿರುವುದನ್ನು ಸ್ಮರಿಸಿದರು.ಕಾರ್ಯಕ್ರಮದಲ್ಲಿ ಗೌರಿಬಿದನೂರಿನ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ನಾರಾಯಣಪ್ಪ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಮಕೃಷ್ಣ, ಸರ್ಕಾರಿ ಕಾಲೇಜಿನ ಉಪನ್ಯಾಸಕ ಪ್ರೊ. ಮುಧವೀರಪ್ಪ, ವಿದ್ವಾನ್ ಡಾ. ನಂಜುಂಡಯ್ಯ, ವಿದ್ವಾನ್ ಗಣೇಶ್ ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.