ತಾಲೂಕಿನ ಪ್ರಭಾತನಗರದಲ್ಲಿರುವ ಡಿ. ದೇವರಾಜ ಅರಸು ವಸತಿ ನಿಲಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಹೊನ್ನಾವರ

ತಾಲೂಕಿನ ಪ್ರಭಾತನಗರದಲ್ಲಿರುವ ಡಿ. ದೇವರಾಜ ಅರಸು ವಸತಿ ನಿಲಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಪ್ರವೀಣ ಕರಾಂಡೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ನಾಯಕ. ಹಿಂದುಳಿದ ಸಮುದಾಯಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಅವರು, ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಲಕ್ಷಾಂತರ ಉಳುವ ರೈತರಿಗೆ ಭೂಮಿಯ ಮಾಲಕತ್ವ ದೊರಕಿಸಿಕೊಟ್ಟರು. ಬಡವರ ಏಳಿಗೆಗಾಗಿ ಅನೇಕ ಜನಪರ ಯೋಜನೆಗಳನ್ನು ರೂಪಿಸಿ ಅವರ ಬದುಕಿಗೆ ಬೆಳಕಾದರು ಎಂದು ಸ್ಮರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಯೇಸು ಸುಬ್ಬಣ್ಣ ಮಾತನಾಡಿ, ನಾಡು ಕಂಡ ಅಪ್ರತಿಮ ಹಾಗೂ ಧೀಮಂತ ನಾಯಕ ಅರಸು ಅವರು ದೀನ-ದಲಿತರ ಮತ್ತು ಹಿಂದುಳಿದ ವರ್ಗಗಳ ನಿಜವಾದ ಆಶಾಕಿರಣವಾಗಿದ್ದರು. ಪ್ರತಿಯೊಬ್ಬರೂ ಅವರ ಉದಾತ್ತ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ಪಡೆದ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಕೆ. ಗಣಪತಿಯವರನ್ನು ಸಿಬ್ಬಂದಿ ಸನ್ಮಾನಿಸಿದರು. ಅಲ್ಲದೆ ನಿಲಯದಲ್ಲಿ ಹಲವು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ಈ ಸಂದರ್ಭ ಸಿಡಿಪಿಒ ವನಿತಾ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಭಜಂತ್ರಿ, ಮುಖಂಡರಾದ ಅಣ್ಣಪ್ಪ ನಾಯ್ಕ, ಶಂಕರ್ ಗೌಡ, ಮಂಜುನಾಥ್ ಗೌಡ, ಎಂ.ಜಿ. ನಾಯ್ಕ ಹಾಗೂ ವಸತಿ ನಿಲಯದ ವಾರ್ಡನ್ ಸ್ವಾತಿ ನಾಯ್ಕ ಸೇರಿ ಹಲವರು ಉಪಸ್ಥಿತರಿದ್ದರು. ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಕೆ. ಗಣಪತಿ ಸ್ವಾಗತಿಸಿದರು. ಯುವಜನ ಕ್ರೀಡಾಧಿಕಾರಿ ಸುಧೀಶ್ ನಾಯ್ಕ ನಿರೂಪಿಸಿದರು.