ಉಡುಪಿ: ವಿಶೇಷಚೇತನರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಹಲವು ಪ್ರತಿಭೆಗಳಿವೆ. ಅವರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವ ಕೆಲಸವನ್ನು ಸಮಾಜ ಮತ್ತು ಸರ್ಕಾರ ಮಾಡಬೇಕು ಎಂದು ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಎಸ್. ಹೇಳಿದರು.

ಬುಧವಾರ ಕುಂದಾಪುರ ತಾಪಂ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ನಡೆದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ವಿಕಲಚೇತನರ ಸಬಲೀಕರಣ ಕುರಿತಾಗಿ ಮಾತನಾಡಿದರು. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನಾ ಸಹಾಯಕ ಶಿವಾಜಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಡಾ. ಶ್ರೇಯಾ, ವೈಶಾಖ್ ವಾರಂಬಳ್ಳಿ, ನೆಲಿಶಾ ನಾಯಕ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಶಂಕರ್, ನಿವೃತ್ತ ಅಧಿಕಾರಿ ನಿರಂಜನ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ., ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಸ್., ಕುಂದಾಪುರ ತಾಲೂಕು ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ್ ಹೆಬ್ಬಾರ್, ಬೈಂದೂರು ತಾಲೂಕು ಪುನರ್ವಸತಿ ಕಾರ್ಯಕರ್ತರಾದ ಸವಿತಾ ಮುಖ್ಯ ಅತಿಥಿಗಳಾಗಿದ್ದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿ, ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರ್ವಹಿಸಿದರು.