ಕೊಂಚ ತಗ್ಗಿದ ಮಳೆ: ಮನೆ ಗೋಡೆ ಕುಸಿದು ಹಾನಿ

| Published : Jul 18 2024, 01:35 AM IST

ಸಾರಾಂಶ

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಬುಧವಾರ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಬುಧವಾರ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಮಂಗಳವಾರ ಧಾರಾಕಾರ ಸುರಿದ ಮಳೆಗೆ ರಂಭಾಪುರಿ ಮಠ ರಸ್ತೆಯ ರೇಣುಕನಗರದ ಸುರೇಂದ್ರ ಕಿಣಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಮನೆಗೆ ಹಾನಿಯಾಗಿದೆ. ಆದರೆ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಾಡ ಕಚೇರಿ ವಿಎ ಸಮೀಕ್ಷಾ, ಬಿ.ಕಣಬೂರು ಗ್ರಾಪಂ ಪಿಡಿಒ ಕಾಶಪ್ಪ ಭೇಟಿ ನೀಡಿ ಪರಿಶೀಲಿಸಿದರು.ಸಮೀಪದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯ ಮೇಗರಮಕ್ಕಿ ಕಿಚ್ಚಬ್ಬಿ ಸುಭಾಶ್ ಎಂಬುವರ ಮನೆ ಸಮೀಪದ ಧರೆ ಕುಸಿತಗೊಂಡು ಹಾನಿಯಾಗಿದ್ದು, ಮನೆಗೂ ಹಾನಿಯಾಗುವ ಆತಂಕ ಎದುರಾಗಿದೆ. ಸ್ಥಳಕ್ಕೆ ಆಡುವಳ್ಳಿ ಗ್ರಾಪಂ ಪಿಡಿಒ, ಗ್ರಾಮಲೆಕ್ಕಿಗರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬುಧವಾರ ಬೆಳಗ್ಗಿನಿಂದ ಪುನರ್ವಸು ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು, ಭದ್ರಾನದಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನೀರಿನ ಪ್ರಮಾಣದಲ್ಲಿಯೂ ಸ್ವಲ್ಪ ಇಳಿಕೆಯಾಗಿದೆ. ಕೆಲವು ಗ್ರಾಮಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗಾಳಿ ಮಳೆಗೆ ವಿದ್ಯುತ್ ವ್ಯತ್ಯಯವಾಗಿದ್ದು, ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.ಕಳೆದ ಎರಡ್ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜನ ಓಡಾಟ ಕಡಿಮೆಯಾಗಿದ್ದು, ವ್ಯಾಪಾರ ವಹಿವಾಟು ಸಹ ಕುಂಠಿತಗೊಂಡಿದೆ.