ಹಾಸನ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದೆ. ಹಾಗಾಗಿ ಜಲಾಶಯದ ಮುಂದೆ ಉದ್ಯಾನವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಾನು ಮಾತು ಕೊಡುವುದಿಲ್ಲ.
ಕನ್ನಡಪ್ರಭ ವಾರ್ತೆ ಹಾಸನ
ನಾನು ಈ ಹಿಂದೆ ಮಂತ್ರಿ ಆಗಿದ್ದಾಗ ಜಿಲ್ಲೆಯ ಗೊರೂರಿನ ಹೇಮಾವತಿ ಅಣೆಕಟ್ಟೆಗೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ಅಣೆಕಟ್ಟೆ ಮುಂದಿರುವ ವಿಶಾಲವಾದ ಜಾಗದಲ್ಲಿ ಉದ್ಯಾನವನ ನಿರ್ಮಾಣದ ಬಗ್ಗೆ ಚಿಂತನೆ ಮಾಡಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡರ ಒತ್ತಾಯದಂತೆ ಅಲ್ಲಿ ಉದ್ಯಾನವನ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶ, 50 ಸಾವಿರಕ್ಕೂ ಹೆಚ್ಚಿನ ಕುಟುಂಬಗಳ ಸಂಭ್ರಮದ ಕ್ಷಣವಾಗಿ ಕಂದಾಯ ಇಲಾಖೆಯ ದರಖಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ, 94ಸಿ ಹಕ್ಕುಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ ಸಮರ್ಪಣೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು.
ಹಾಸನದಲ್ಲಿ ಪ್ರವಾಸೋದ್ಯಮ ಸಾಕಷ್ಟಿದೆ. ಹಾಗಾಗಿ ಪ್ರವಾಸೋದ್ಯಮ ಅಭಿವೃದ್ಧಿಯ ಭಾಗವಾಗಿ ಹೇಮಾವತಿ ಜಲಾಶಯದ ಮುಂದೆ ಉದ್ಯಾನವನ ಮಾಡಬೇಕೆಂದು ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡರು ವೇದಿಕೆಯಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಹಾಸನ ನಮಗೆ ನೆರೆಯ ಜಿಲ್ಲೆ. ಹಾಸನ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದೆ. ಹಾಗಾಗಿ ಜಲಾಶಯದ ಮುಂದೆ ಉದ್ಯಾನವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಾನು ಮಾತು ಕೊಡುವುದಿಲ್ಲ. ಕೊಟ್ಟ ಮೇಲೆ ಆ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದು ಅಭಯ ನೀಡಿದರು.75 ವರ್ಷಗಳಾದರೂ ಸಮಾನತೆ ಬಂದಿಲ್ಲ:
ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ದೇಶದಲ್ಲಿ ಈವರೆಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಾನತೆ ಬಂದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿರುವುದರಿಂದ ಸಮಾನತೆ ಬರುತ್ತಿಲ್ಲ. ಹಾಗಾಗಿ ಸಮಾಜದಲ್ಲಿ ಅಸಮಾನತೆ ಇದ್ದರೆ ಸ್ವಾತಂತ್ರ ಬಂದು ಏನು ಪ್ರಯೋಜನ ಇಲ್ಲ. ಈ ಅಸಮಾನತೆಯನ್ನು ಹೋಗಲಾಡಿಸಲೆಂದೇ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಎಂದು ಹೇಳಿದರು.ಇಂದು 132 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ 166 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ನೂರಾರು ಕೋಟಿ ರು.ಗಳ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಅತ್ಯಂತ ಸಂತೋಷದಿಂದ ನೇರವೇರಿಸಿದ್ದೇನೆ. ಇಲ್ಲಿಯ ಸಮಸ್ಯೆಗಳನ್ನು ಅರಿತ್ತಿದ್ದು ಅವುಗಳಿಗೆ ಪರಿಹಾರ ದೊರಕಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.ಇದುವರೆಗೆ 1,08, 135 ಕೋಟಿ ರು. ವೆಚ್ಚ ಮಾಡಲಾಗಿದೆ. ಸರ್ಕಾರ ರಚನೆಗೊಂಡ ಒಂದು ವರ್ಷದೊಳಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಇದುವರೆಗೂ 600 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ ಎಂದರು.
ಇಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವವನ್ನು ದೇಶದಲ್ಲಿ ಸ್ಥಾಪನೆ ಮಾಡಿದ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.ಉಪ ಮುಖ್ಯಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾತನಾಡಿ, ಕಂದಾಯ ಇಲಾಖೆಯಲ್ಲಿ ದೊಡ್ಡ ಕ್ರಾಂತಿ ಮಾಡಿದ್ದಾರೆ. ತಾತ ಮುತ್ತಾತನ ಕಾಲದಿಂದಲೂ ಬಗೆಹರಿಯದ ಭೂ ಸಮಸ್ಯೆಗಳನ್ನು ಖುದ್ದು ದಾಖಲಾತಿಗಳನ್ನು ಪಡೆದು, ಹೊಸರೂಪವನ್ನು ಕೊಡುವುದರ ಮೂಲಕ ಆರನೇ ಗ್ಯಾರೆಂಟಿಯಾಗಿ ಭೂ ಗ್ಯಾರಂಟಿಯನ್ನು ಜನತೆಗೆ ಅರ್ಪಿಸಿದ್ದಾರೆ ಎಂದು ತಿಳಿಸಿದರು.ಒತ್ತುವರಿ ಮಾಡಿಕೊಂಡವರಿಗೆ ಸಕ್ರಮಮಾಡಿ ಉಳುವವರಿಗೆ ಭೂಮಿ ಕೊಡುವ ಕೆಲಸ ಮಾಡಲಾಗುತ್ತಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಲ್ಲಿ ಕೆಲವು ತೊಡಕುಗಳಿವೆ ಅದನ್ನು ಪರಿಹರಿಸಿ ತುಮಕೂರು ವರೆಗೂ ನೀರು ತೆಗೆದುಕೊಂಡು ಹೋಗಲಾಗುವುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಜಾರಿಯಾದರೆ ಹಾಸನ, ಮಂಡ್ಯ, ಚಾಮರಾಜನಗರ ಮತ್ತಿತರ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಭಗವಂತ ಅವಕಾಶ ನೀಡಿದ್ದಾರೆ. ಉತ್ತಮ ಕೆಲಸ ಮಾಡುವ ಮೂಲಕ ಜನರ ಕಲ್ಯಾಣ ಮಾಡಬೇಕು. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಹಾಸನಕ್ಕೆ ಹೊಸರೂಪ ಕೂಡುವ ಕೆಲಸವಾಗಬೇಕು ಎಂದರು.ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಸಮುದ್ರದ ರೀತಿಯಲ್ಲಿ ಜನಸಾಗರ ಹರಿದುಬಂದಿದ್ದು, ತಾಳ್ಮೆಯಿಂದ ಇಷ್ಟುಸಂಖ್ಯೆಯಲ್ಲಿ ಜನ ಬಂದಿರುವುದು ನಮ್ಮ ಪುಣ್ಯ. ಕಾರ್ಯಕ್ರಮದ ಯಶಸ್ವಿಗಾಗಿ ಹಗಲಿರುಳು ಶ್ರಮಿಸಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.
ಹಾಸನದಲ್ಲಿ 10 ವರ್ಷದಲ್ಲಿ 2444 ರೈತರ ಜಮೀನು ಪೋಡಿ ಮಾಡಲಾಗಿತ್ತು. ಈಗ ಒಂದು ವರ್ಷದಲ್ಲಿ 24000 ರೈತರ ಜಮೀನನ್ನು ದುರಸ್ಥಿ ಕೈಗೊಂಡಿದ್ದೇವೆ. ರಾಜ್ಯದಲ್ಲಿ 8500 ದುರಸ್ಥು ಆಗಿತ್ತು ಒಂದು ವರ್ಷದೊಳಗೆ 1,51,313 ದುರಸ್ಥು ಮಾಡಿದ್ದೇವೆ ರೈತರ ಮನೆ ಬಾಗಿಲಿಗೆ ಹೋಗಿ ದುರಸ್ಥಿ ಮಾಡಿಕೊಡಲಾಗಿದೆ ಎಂದರು.ಭೂಮಿ ಎಂಬುದು ಗೊಂದಲದ ಗೂಡಾಗಿದೆ. ವಿವಾದಗಳನ್ನು ಬಗೆಹರಿಸಿ, ಭೂ ಗ್ಯಾರಂಟಿ ಕಡೆಗೆ ಕೊಂಡೊಯ್ಯಲಾಗುತ್ತಿದೆ. ಭೂ ಮಾಲೀಕತ್ವದ ಖಚಿತತೆ ಕೊಡುವ ಕೆಲಸ ಮಾಡಲಾಗುತ್ತಿದೆ. ಇದೊಂದು ದೊಡ್ಡ ಮೈಲಿಗಲ್ಲು. ನಾನ ಬದಲಾವಣೆಗಳನ್ನು ತಂದು ಭೂ ಗ್ಯಾರಂಟಿ ನೀಡಲು ಒಂದು ತಂಡವಾಗಿ ಕೆಲಸ ಮಾಡುವ ಮೂಲಕ ಅಧಿಕಾರಿ ಸಿಬ್ಬಂದಿ ಸಹಕಾರ ನೀಡುತ್ತಿದ್ದಾರೆ ಎಂದರು.
ಕರ್ನಾಟಕ ಗೃಹಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿ ಶತಮಾನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವನ್ನು ಮಾಡುವುದರ ಮೂಲಕ ರೈತರಿಗೆ ಭೂ ದಾಖಲೆಗಳನ್ನು ಒದಗಿಸುವ ಮೂಲಕ ಕಂದಾಯ ಇಲಾಖೆ ಕ್ರಾಂತಿ ಮಾಡಿದೆ ಎಂದರು.ಸಚಿವರಾದ ಸತೀಶ್ ಜಾರಕಿಹೊಳಿ ಮಾತನಾಡಿ, ಹಲವಾರು ವರುಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಕಂದಾಯ ಇಲಾಖೆ ಮಾಡುತ್ತಿದೆ. ಇದರಿಂದ ಇಡೀ ರಾಜ್ಯದ ಜನತೆಗೆ ಲಾಭ ದೊರಕುತ್ತಿದೆ ಎಂದರು. ಹೊಸ ಕಾಮಗಾರಿಗಳನ್ನು ನಿಲ್ಲಿಸಿ ಹಳೆಯ ನಾಲೆಗಳ ದುರಸ್ಥಿಗೆ ಹೆಚ್ಚು ಒತ್ತು ನೀಡಿದರೆ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದರು.
ಶಾಸಕರಾದ ಡಾ. ಸಿ.ಎನ್. ಬಾಲಕೃಷ್ಣ, ಸಿಮೆಂಟ್ ಮಂಜು ಅವರು ಮಾತನಾಡಿದರು. ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ,ಲೋಕೋಪಯೋಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್ಖಾನ್, ಸಂಸದರಾದ ಶ್ರೇಯಸ್ ಎಂ. ಪಟೇಲ್, ಶಾಸಕರಾದ ಹೆಚ್.ಕೆ. ಸುರೇಶ್, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಣ್ಣ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೋಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಆರ್ ಪೂರ್ಣಿಮಾ, ಹಿಂದಿನ ಜಿಲ್ಲಾಧಿಕಾರಿ ಸತ್ಯಭಾಮ ಮತ್ತಿತರರು ಭಾಗವಹಿಸಿದ್ದರು.*****
ಬಾಕ್ಸ್....ಕೃಷ್ಣಭೈರೇಗೌಡರು ಮುಂದಿಟ್ಟ ಬೇಡಿಕೆಗಳುಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ ವೇಗ ಸಿಗಬೇಕು. ಹೇಮಾವತಿ ನಾಲೆ ಸೇರಿದಂತೆ ಇತರೆ ನಾಲೆಗಳು ಉಪ ನಾಲೆಗಳ ಆಧುನೀಕರಣವಾಗಬೇಕು. ಇದರಿಂದ ಅಚ್ಚುಕಟ್ಟು ವ್ಯಾಪ್ತಿಯ ಕಟ್ಟಕಡೆಯ ರೈತರಿಗೂ ನೀರು ತಲುಪುತ್ತದೆ. ಗೊರೂರಿನ ಹೇಮಾವತಿ ಜಲಾಶಯದ ಕೆಳ ಭಾಗದಲ್ಲಿ ಉದ್ಯಾನವನ ನಿರ್ಮಾಣ ಮಾಡಿದರೆ ಪ್ರವಾಸೋಧ್ಯಮಕ್ಕೆ ಪುಷ್ಠಿ ನೀಡಿದಂತಾಗುತ್ತದೆ. ಗಂಡಸಿ ಹೋಬಳಿಗಳ ಕೆರೆಗಳಿಗೆ ಕಾವೇರಿ ನೀರಾವರಿ ನಿಗಮದಿಂದ ನೀರು ತುಂಬಿಸುವ ಕೆಲಸ ಆಗಬೇಕು. ಮಾನವ ಪ್ರಾಣಿ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ರೈತರು ತೊಂದರೆಗೆ ಸಿಲುಕುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರಕ್ಕಾಗಿ ಯೋಜನೆ ರೂಪಿಸಬೇಕು ಎಂದು ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದರು.