ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಲು ಪ್ರಸ್ತಾವನೆ

| Published : Jan 04 2025, 12:30 AM IST

ಸಾರಾಂಶ

ಜಿಲ್ಲಾ ಕೇಂದ್ರದ ಬೆಳವಣಿಗೆಯ ದೂರದೃಷ್ಟಿಯನ್ನು ಇಟ್ಟುಕೊಂಡು ಈ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೂವಿನ ಮಾರುಕಟ್ಟೆಗಾಗಿ 140 ಕೋಟಿ ರುಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆ ವಿವಿಧ ಹೂ ಬೆಳೆಗಳಿಗೆ ಹೆಸರಾಗಿದ್ದು, ಜಿಲ್ಲೆಯ ಹೂ ಬೆಳೆಗಾರರು ಮತ್ತು ವ್ಯಾಪಾರಿಗಳ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬಳಿಯ ತೋಟಗಾರಿಕೆ ಇಲಾಖೆಗೆ ಸೇರಿದ 20 ಎಕರೆ ಪ್ರದೇಶದಲ್ಲಿ 140 ಕೋಟಿ ವೆಚ್ಚದ ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಲು ಉದ್ಧೇಶಿಸಲಾಗಿದೆ. ಈ ವರ್ಷದ ಬಜೆಟ್‌ನಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಮುಖ್ಯಮಂತ್ರಿಗಳು ಘೋಷಿಸುವ ವಿಶ್ವಾಸವಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹೂವಿನ ವ್ಯಾಪಾರಸ್ಥರು ಮತ್ತು ಹೂ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಹೈಟೆಕ್ ಹೂವಿನ ಮಾರುಕಟ್ಟೆಯ ನೀಲ ನಕ್ಷೆಯ ಕುರಿತು ಮಾಹಿತಿ ನೀಡುವ ಜೊತೆಗೆ ಅಭಿಪ್ರಾಯಗಳನ್ನು ಸಂಗ್ರಹಿಸಿದರು.

20 ಎಕರೆ ಜಮೀನು ಮಂಜೂರು

ಈಗಾಗಲೇ ತೋಟಗಾರಿಕೆ ಇಲಾಖೆಗೆ ಸೇರಿದ 20 ಎಕರೆ ಜಮೀನು ಹೂವಿನ ಮಾರುಕಟ್ಟೆಗೆ ಉಚಿತವಾಗಿ ಮಂಜೂರಾಗಿದೆ. ಜಿಲ್ಲಾ ಕೇಂದ್ರದ ಬೆಳವಣಿಗೆಯ ದೂರದೃಷ್ಟಿಯನ್ನು ಇಟ್ಟುಕೊಂಡು ಈ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೂವಿನ ಮಾರುಕಟ್ಟೆಗಾಗಿ 140 ಕೋಟಿ ರುಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದು, ಇದೇ ವರ್ಷದ ಬಜೆಟ್‌ನಲ್ಲಿ ಘೋಷಿಸುವಂತೆಯೂ ಮನವಿ ಮಾಡಲಾಗುವುದು. 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಯಾಗುವ ವಿಶ್ವಾಸವೂ ತಮಗಿದೆ ಎಂದು ತಿಳಿಸಿದರು.

ಹೈಟೆಕ್ ರೇಷ್ಮೆ ಮಾರುಕಟ್ಟೆ

ಹೂವಿನ ಮಾರುಕಟ್ಟೆಯಲ್ಲಿ ಇ-ಹರಾಜು ವಿಭಾಗ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಇರಲಿವೆ. ಈಗಾಗಲೇ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆಯನ್ನು ನಿರ್ಮಿಸಲು ಹಣ ಮಂಜೂರಾಗಿದೆ. ಸ್ಥಳವೂ ಆಗಿರುವುದರಿಂದ ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಇನ್ನು ಒಂದು ಅಥವಾ ಎರಡು ತಿಂಗಳ ಒಳಗಾಗಿ ಮುಖ್ಯಮಂತ್ರಿಗಳು ಈ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ನಿಟ್ಟಾಲಿ, ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಆರ್.ಉಮಾ, ಸಹಾಯಕ ನಿರ್ದೇಶಕಿ ವಿನುತಾ, ಕೃಷಿ ಇಲಾಖೆಯ ಅಭಿಯಂತರರು, ಹೂವಿನ ವರ್ತಕರು, ರೈತರು ಇದ್ದರು.