ಒತ್ತುವರಿ ತೆರವಿಗೆ ಗ್ರಾಮಸ್ಥರು ಸಹಕರಿಸುವಂತೆ ಎ.ಆರ್. ಕೃಷ್ಣಮೂರ್ತಿ ಸಲಹೆ

| Published : Jun 10 2025, 06:19 AM IST

ಒತ್ತುವರಿ ತೆರವಿಗೆ ಗ್ರಾಮಸ್ಥರು ಸಹಕರಿಸುವಂತೆ ಎ.ಆರ್. ಕೃಷ್ಣಮೂರ್ತಿ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಮಾರನಪುರ ಗ್ರಾಮದ ಈ ರಸ್ತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ೨೦ ಲಕ್ಷ ರು. ವೆಚ್ಚದಲ್ಲಿ ೮೦ ಮೀಟರ್ ಸಿಸಿ ಚರಂಡಿ, ೧೦೦ ಮೀಟರ್ ರಸ್ತೆ ಹಾಗೂ ೨ ಕಡೆ ಡೆಕ್ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಇಲ್ಲಿಗೆ ಆಗುವ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆಯ ಜೆಇ ಹಾಗೂ ಗುತ್ತಿಗೆದಾರನಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಯಳಂದೂರು

ಗ್ರಾಮೀಣ ಭಾಗದಲ್ಲಿ ನಡೆಯುವ ಕಾಮಗಾರಿಯ ಸಂದರ್ಭದಲ್ಲಿ , ಅದರಲ್ಲೂ ವಿಶೇಷವಾಗಿ ರಸ್ತೆ, ಚರಂಡಿ ಕಾಮಗಾರಿಗಳ ವೇಳೆ ಗ್ರಾಮಸ್ಥರು ಒತ್ತುವರಿ ಮಾಡಿಕೊಂಡಿರುವ ಸ್ಥಳವನ್ನು ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು.

ಅವರು ಸೋಮವಾರ ತಾಲೂಕಿನ ಕೊಮಾರನಪುರ ಗ್ರಾಮದಲ್ಲಿ ಲಿಂಗಾಯತ ಬಡಾವಣೆಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಅನೇಕ ಕಡೆ ಸಾರ್ವಜನಿಕರು ಒತ್ತುವರಿ ತೆರವುಗೊಳಿಸಿ ರಸ್ತೆ ನಿರ್ಮಿಸಿ ಎಂದು ಮನವಿ ಮಾಡುತ್ತಾರೆ. ಸರ್ಕಾರಿ ಜಾಗವಾಗಿದ್ದಲ್ಲಿ ಇದನ್ನು ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುತ್ತಾರೆ. ಇದಕ್ಕೆ ಸ್ಥಳೀಯರು ಸಹಕರಿಸಬೇಕು ಎಂದರು.

ಕೊಮಾರನಪುರ ಗ್ರಾಮದ ಈ ರಸ್ತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ೨೦ ಲಕ್ಷ ರು. ವೆಚ್ಚದಲ್ಲಿ ೮೦ ಮೀಟರ್ ಸಿಸಿ ಚರಂಡಿ, ೧೦೦ ಮೀಟರ್ ರಸ್ತೆ ಹಾಗೂ ೨ ಕಡೆ ಡೆಕ್ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಇಲ್ಲಿಗೆ ಆಗುವ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆಯ ಜೆಇ ಹಾಗೂ ಗುತ್ತಿಗೆದಾರನಿಗೆ ಸೂಚನೆ ನೀಡಿದರು.

ಗುಂಬಳ್ಳಿ ಗ್ರಾಮದಿಂದ ಕೊಮಾರನಪುರ ರಸ್ತೆ ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಪಡೆದ ವ್ಯಕ್ತಿ ಈ ಕೆಲಸವನ್ನು ಮಾಡಲೇ ಇಲ್ಲ. ಸರ್ಕಾರಕ್ಕೆ ಈ ಹಣ ವಾಪಸ್ಸಾಗಿತ್ತು. ಮತ್ತೆ ನಾನು ಸರ್ಕಾರದಿಂದ ಈ ಹಣವನ್ನು ಮರು ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಕಾಮಗಾರಿ ವಿಳಂಬವಾಗಿದ್ದು, ಈಗಾಗಲೇ ಸಂಬಂಧಪಟ್ಟವರಿಗೆ ನಾನು ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಈ ಕೆಲಸ ಆರಂಭಗೊಳ್ಳಲು ಕ್ರಮ ವಹಿಸುತ್ತೇನೆ ಎಂದರು.

ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಮುಖಂಡರಾದ ವರ್ಧನ್, ರಂಗರಾಮು, ಪ್ರಕಾಶ್, ಕಂದಹಳ್ಳಿ ನಂಜುಂಡಸ್ವಾಮಿ, ಚಾಮುಲ್ ನಿರ್ದೇಶಕ ರೇವಣ್ಣ, ಶಿವಕುಮಾರ್, ವೀರಭದ್ರಸ್ವಾಮಿ ಸೇರಿದಂತೆ ಅನೇಕರು ಇದ್ದರು.