ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಪರಿಸರ ರಕ್ಷಣೆಗಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ 50 ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಹೇಳಿದರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಾನವನ ದುರಾಸೆಗೆ ಪರಿಸರವನ್ನು ನಿರಂತರವಾಗಿ ನಾಶ ಮಾಡುತ್ತಿದ್ದಾನೆ.
ಭೂಮಿಯ ಮೇಲಿನ ಪ್ರತಿಯೊಂದು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಪರಿಸರದ ದಿನಾಚರಣೆಯನ್ನು ಪರಿಸರದ ಜಾಗೃತಿ ಮತ್ತು ಪರಿಸರ ಸಂಕ್ಷಣೆಗಾಗಿ ಆಚರಿಸಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸಿ ಪರಿಸರ ಹಾಳಾಗದಂತೆ ತಡೆಗಟ್ಟಬಹುದಾಗಿದೆ ಎಂದರು.ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಎಂ. ಸಾಲಿ ಮಾತನಾಡಿ, ಪರಿಸರ ನಮ್ಮ ಗುರುವಾಗಿದೆ. ಪರಿಸರ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪರಿಸರ ಸಂರಕ್ಷಣೆ ನಮ್ಮಿಂದಲೇ ಪ್ರಾರಂಭವಾಗಬೇಕು. ಪ್ಲಾಸ್ಟಿಕ್ ನಿಭಾಯಿಸುವ ಪರ್ಯಾಯ ಯೋಜನೆಯನ್ನು ರೂಪಿಸಿಕೊಂಡು ಪ್ಲಾಸ್ಟಿಕ್ ಮಾಲಿನ್ಯ ಕಡಿಮೆ ಮಾಡಿ ಆರೋಗ್ಯಕರ ಭವಿಷ್ಯ ರೂಪಿಸಬಹುದಾಗಿದೆ ಎಂದರು.
ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ. ಶಶಿಕಾಂತ ಮಜಗಿ ಮಾತನಾಡಿ, ನಮ್ಮ ದೇಹದ ಕಣ ಕಣದಲ್ಲೂ ಪ್ಲಾಸ್ಟಿಕ್ ಅಂಶಗಳಿವೆ. ಮೈಕ್ರೋಪ್ಲಾಸ್ಟಿಕ್ಗಳ ನಿರ್ವಹಣೆ ಸವಾಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ಜ್ಞಾನದ ಜತೆಗೆ ಪರಿಸರದ ಕಾಳಜಿ ವಹಿಸುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.ಪ್ರಾಣಿಶಾಸ್ತ್ರ ಪ್ರಾಧ್ಯಾಪಕ ಡಾ. ನಾಗಭೂಷಣ್, ಪ್ಲಾಸ್ಟಿಕ್ ಬಳಕೆ ಹಾಗೂ ನಿರ್ವಹಣೆ ಕುರಿತು ಜಾಗೃತಿ ಹೊಂದುವುದು ಇಂದು ಅನಿವಾರ್ಯವಾಗಿದೆ. ಯಾವುದೆ ಬಗೆಯ ಪ್ಲಾಸ್ಟಿಕ್ ಬಳಸಬೇಕಾದರೆ ಹಲವು ಬಾರಿ ಯೋಚಿಸಿ ಬಳಸಿ ಎಂದರು.
ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಜೀವ ವಿಜ್ಞಾನ ಕಟ್ಟಡ ಮುಂಭಾಗದಲ್ಲಿ ಸಸಿ ನೆಡಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ವಾಚನ ಮಾಡಿದರು.ವಿವಿಯ ಸಿಂಡಿಕೇಟ್ ಸದಸ್ಯ ರಮೇಶ ಸವದಿ, ಪ್ರಾಣಿಶಾಸ್ತ್ರ ವಿಭಾಗದ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.5 ಬಿಆರ್ವೈ 5
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಆವರಣದಲ್ಲಿ ಕುಲಪತಿ ಪ್ರೊ. ಎಂ. ಮುನಿರಾಜು ಅವರು ಸಸಿಗಳನ್ನು ನೆಟ್ಟರು.