ಸಾರಾಂಶ
2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ ‘ಬೇಟಿ ಬಚವೊ-ಬೇಟಿ ಪಡಾವೊ’ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ‘ಸಮಗ್ರ ಲೈಂಗಿಕ ಶಿಕ್ಷಣದ ವಿಶೇಷ ಕಾರ್ಯಗಾರ’ ಬುಧವಾರ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದೂ ಅಪರಾದ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಕೂಡದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್ ಹೇಳಿದ್ದಾರೆ.2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ ‘ಬೇಟಿ ಬಚವೊ-ಬೇಟಿ ಪಡಾವೊ’ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ‘ಸಮಗ್ರ ಲೈಂಗಿಕ ಶಿಕ್ಷಣದ ವಿಶೇಷ ಕಾರ್ಯಗಾರ’ ಹಾಗೂ ‘ಮಹಿಳಾ ಸಾಧಕಿಯರ ಪ್ರೇರಾಣಾ ತುಣುಕು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭದಲ್ಲಿರುವ ಮಗುವಿಗೆ ಬದುಕುವ ಹಕ್ಕಿದೆ. ಮಕ್ಕಳ ರಕ್ಷಣೆ, ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಗರ್ಭದಲ್ಲಿರುವ ಮಗುವಿಗೆ ಸಾಮಾಜಿಕ ಧೋರಣೆ, ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದು ಕಾನೂನಿನ ಪ್ರಕಾರ ಅಪರಾಧ. ಈ ನಿಟ್ಟಿನಲ್ಲಿ ಮಕ್ಕಳಿಗೆ ಸಮಗ್ರ ಲೈಂಗಿಕ ಶಿಕ್ಷಣದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಸೂಕ್ತ ರೀತಿಯಲ್ಲಿ ಮಕ್ಕಳು ಮಾಹಿತಿಯನ್ನರಿತು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದರು.ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿ, ಮಕ್ಕಳಿಗೆ ರಕ್ಷಣಾತ್ಮಕ ಕಾನೂನುಗಳಿದ್ದು, ಮಕ್ಕಳಿಗಾಗಿ ಮಕ್ಕಳ ಸಹಾಯವಾಣಿ ಕೇಂದ್ರ 1098 ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗೆ ಕ್ರೀಯಾತ್ಮಕ ಚಟುವಟಿಕೆ ಮಾಡಿಸುವುದರೊಂದಿಗೆ ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಕುರಿತು ತಿಳಿಸಿದರು.ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯರ ಪ್ರೇರಣಾ ತುಣುಕುಗಳನ್ನು ತೋರಿಸಲಾಯಿತು. ಮಡಿಕೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಶೀಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಹಾಗೂ ಜಿಲ್ಲಾ ಬಾಲಭವನ ಸಿಬ್ಬಂದಿ, ಪೋಷಣ್ ಅಭಿಯಾನ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ ಹಾಜರಿದ್ದರು.ಎಸ್. ಆರ್. ಜೆಂಡರ್ ಸ್ಪೆಷಲಿಸ್ಟ್, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್. ಕೇಶಿನಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿಯ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.