ಕನ್ನಡಪ್ರಭ ವಾರ್ತೆ ಬೆಳಗಾವಿ

ಗ್ರಾಮಗಳ‌ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರಗಳಿಂದ ಅನೇಕ‌ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳು‌ ತಳ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪಂಚಾಯತ ರಾಜ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಪಂಚಾಯತ್‌ ರಾಜ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರಿಂದ ಜನರಿಗಾಗಿ ನಡೆಯುವ ಆಡಳಿತ ಗ್ರಾಮ ಮಟ್ಟದಲ್ಲೇ ಆರಂಭವಾಯಿತು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಈ ಮೂರು ಹಂತಗಳ ವ್ಯವಸ್ಥೆಯಡಿ ಗ್ರಾಮಗಳ ಅಭಿವೃದ್ಧಿಗೆ ಬಲವಾದ ಅಡಿಪಾಯ ಹಾಕಲಾಗಿದೆ. ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು‌ ನನಸಾಗಿಸಲು ರಾಜ್ಯ ಸರ್ಕಾರ ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು‌ ನೀಡುತ್ತಿದೆ ಎಂದು ತಿಳಿಸಿದರು.

ಗ್ರಾಮಗಳ‌ ಸಬಲೀಕರಣದಲ್ಲಿ ಸ್ಥಳೀಯ ಆಡಳಿತಗಳು ಉತ್ತಮ ಕಾರ್ಯನಿರ್ವಹಿಸಬೇಕು.‌ ಇಲ್ಲಿನ ಜನಸಂಖ್ಯೆಗೆ‌ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ಸಮನ್ವಯ ಮುಖ್ಯವಾಗಿದೆ. ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ‌‌ ಜಿಲ್ಲೆ ಮುಂಚೂಣಿಯಲ್ಲಿದೆ. ಜಿಲ್ಲೆಯ ಅಧಿಕಾರಿಗಳು ‌ಕಾನೂನು ವ್ಯಾಪ್ತಿಯಲ್ಲಿ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ‌ ನಿರ್ವಹಿಸಬೇಕು. ಅಧಿಕಾರಿಗಳು ತಮ್ಮ ಅವಧಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವುದರ‌ ಮೂಲಕ ಜನರ ಮನದಲ್ಲಿ ಶಾಶ್ವತವಾಗಿ ಉಳಿಯುವಂತೆ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಗ್ರಾಮಗಳು ಸುಧಾರಣೆಯಾದಲ್ಲಿ ದೇಶ ಸುಧಾರಣೆಯಾಗುತ್ತದೆ ಎಂಬ ಮಹಾತ್ಮಾ ಗಾಂಧಿಜಿಯವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಯನ್ನಿಟಿದೆ. ಪಂಚಾಯತ್‌ ರಾಜ್ ವ್ಯವಸ್ಥೆಯಲ್ಲಿ ಗ್ರಾಮೀಣ ಜನರಿಗೆ ಆಡಳಿತಾತ್ಮಕ ಹಕ್ಕನ್ನು ನೀಡಲಾಗಿದೆ. ಗ್ರಾಮ‌ ಪಂಚಾಯತಿ ಕಟ್ಟಡವು ಗ್ರಾಮದ ಸಂಸತ್ ಆಗಿದ್ದು ಗಾಂಧೀಜಿಯವರ ಕನಸನ್ನು ನನಸಾಗಿಸಲು ಮುಂದಾಗಬೇಕು. ಜಿಪಂ ಸಿಇಒ ರಾಹುಲ ಶಿಂಧೆ ಅವರು ಬೆಳಗಾವಿ ಜಿಲ್ಲಾ‌ ಪಂಚಾಯತಿಗೆ ಹೊಸ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಕಾರ್ಯ ವೈಖರಿಯನ್ನು ಶ್ಲಾಘಿಸಿದರು.ಜಿಪಂ ಸಿಇಒ ರಾಹುಲ್‌ ಶಿಂಧೆ ಮಾತನಾಡಿ, ಪಂಚಾಯತ್‌ ರಾಜ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸುವ ಕಾರ್ಯಕ್ರಮವಾಗಿದೆ ಎಂದರು.ಕಾರ್ಯಕ್ರಮದಲ್ಲಿ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ಆಸೀಪ್(ರಾಜು)ಸೇಠ್‌, ಗ್ಯಾರಂಟಿ ಯೋಜನೆಗಳ‌ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ‌ಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟಣ್ಣವರ, ಪೋಲಿಸ್ ಆಯುಕ್ತ ಬೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್‌, ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ‌ ಬಂಗಾರಪ್ಪನವರ, ಜಿಲ್ಲಾ, ತಾಲೂಕು‌ ಮಟ್ಟದ ಅಧಿಕಾರಿಗಳು, ಪಿಡಿಒಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ‌ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರಾರ್ಥನಾ ಪಾಟೀಲ ಹಾಗೂ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರು ಸನ್ಮಾನಿಸಿ ಗೌರವಿಸಿದರು.----------


ಕೋಟ್‌ಮಹಾತ್ಮಾ ಗಾಂಧೀಜಿ ಅವರು ಕಂಡ ಗ್ರಾಮ‌ ಸ್ವರಾಜ್ಯ ಹಾಗೂ ಮಹಿಳಾ ಸಬಲೀಕರಣದಲ್ಲಿ ಪಂಚಾಯತ್ ರಾಜ್ ಇಲಾಖೆ ಪಾತ್ರ ಮಹತ್ವದಾಗಿದೆ. ಜಿಲ್ಲಾ ಪಂಚಾಯತಿ ಸರಕಾರದ ಆಧಾರ ಸ್ತಂಭವಾಗಿದೆ. ಗ್ರಾಮ ಪಂಚಾಯತಿಗಳ ಮೂಲಕ ಬೇರು ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಪಂಚಾಯತ ರಾಜ್ ಪಾತ್ರ ಬಹು ದೊಡ್ಡದಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಪಂಚಾಯತ ರಾಜ್ ಇಲಾಖೆ ಕಾರ್ಯ ನಿರ್ವಹಿಸುತ್ತದೆ. ಯಾವುದೇ ಗ್ರಾಮಗಳ ಅಭಿವೃದ್ಧಿಯಲ್ಲಿ‌ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ.ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ