ಕನ್ನಡಪ್ರಭ ವಾರ್ತೆ ಪಾಂಡವಪುರ
ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪತ್ತೆ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದ ಹಲವು ಸ್ಕ್ಯಾನಿಂಗ್ ಸೆಂಟರ್ಗಳಿಗೆ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಹಾಗೂ ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಿಢೀರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹ ತಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಭೆ ನಡೆಸಿದ ಅಧಿಕಾರಿಗಳು ಬಳಿಕ ಪಟ್ಟಣದಲ್ಲಿ ಇರುವ ಸ್ಕ್ಯಾನಿಂಗ್ ಸೆಂಟರ್ಗಳಿಗೆ ಭೇಟಿಕೊಟ್ಟು ಪರಿಶೀಲಿಸಿದರು.
ಮೊದಲು ಸಾರ್ವಜನಿಕ ಆಸ್ಪತ್ರೆ ಸ್ತ್ರೀರೋಗ ತಜ್ಞೆ ಡಾ.ಶಿಲ್ಪಿ ಶ್ರೀ ನಡೆಸುತ್ತಿರುವ ಶ್ರೀಸಾಯಿ ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿಕೊಟ್ಟ ಅಧಿಕಾರಿಗಳು ಪರಿಶೀಲಿಸಿ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಇರಬೇಕಿದ್ದ ಹಲವು ಮೂಲಸೌಕರ್ಯ ಕೊರತೆ ಕಂಡುಬಂತು. ಬಳಿಕ ಕ್ಲಿನಿಕ್ ನಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವ ಮಾಹಿತಿ ಪಟ್ಟಿ ವೀಕ್ಷಣೆ ಮಾಡಿದರು.ಬಳಿಕ ಇಲ್ಲಿಯವರೆಗೆ ಗರ್ಭಿಣಿಯರಿಗೆ ಮಾಡಿರುವ ಸ್ಕ್ಯಾನಿಂಗ್ ವಿವರವನ್ನು ನೀಡುವಂತೆ ಸೂಚನೆ ನೀಡಿ ತೆರಳಿದರು. ನಂತರ ಬಾಬು ಆಸ್ಪತ್ರೆ ಹಾಗೂ ಇತಿಹಾಸ್ ಕ್ಲಿನಿಕ್ ಗೂತೆರಳಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಸ್ಕ್ಯಾನಿಂಗ್ ಮಾಡಿರುವ ಮಾಹಿತಿ ನೀಡುವಂತೆ ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಮಾತನಾಡಿ, ಹೆಣ್ಣು ಭ್ರೂಣಹತ್ಯೆ ಹಾಗೂ ಬಾಲ್ಯ ವಿವಾಹ ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಮೂರು ಸ್ಕ್ಯಾನಿಂಗ್ ಸೆಂಟರ್ ತೆರಳಿ ಪರಿಶೀಲಿಸಿದ್ದೇವೆ. ಜತೆಗೆ ಆಸ್ಪತ್ರೆ ವೈದ್ಯರಿಗೆ ಸ್ಕ್ಯಾನಿಂಗ್ ನಡೆಸಿರುವ ಮಾಹಿತಿ ನೋಡುವಂತೆ ಸೂಚಿಸಿದ್ದೇವೆ ಎಂದರು.
ಹೆಣ್ಣು ಭ್ರೂಣಹತ್ಯೆ ಕಾನೂನು ಬಾಹಿರದ ಜೊತೆಗೆ ಮಹಾಪಾಪದ ಕೃತ್ಯವಾಗಿದೆ. ಹೆಣ್ಣು ಮಗು ಮನೆಯ ಕಣ್ಣು ಇದ್ದಂತೆ ಅವರನ್ನು ರಕ್ಷಣೆ ಮಾಡಬೇಕಾಗಿರುವುದು ಎಲ್ಲರ ಜವಾಬ್ದಾರಿ. ಹೆಣ್ಣು ಭ್ರೂಣ ಹತ್ಯೆ ತಡೆಗೆ ಹಾಗೂ ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದರು.
ಈ ವೇಳೆ ಹಿಂದುಳಿದ ವರ್ಗ ಇಲಾಖೆ ಸಹಾಯಕ ನಿರ್ದೇಶಕ ನಂದಕುಮಾರ್, ಸಿಡಿಪಿಒ ಪೂರ್ಣಿಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಕೋಮಲಾ, ಸಬ್ ಇನ್ಸ್ ಪೆಕ್ಟರ್ ಧರ್ಮಪಾಲ್ ಸೇರಿದಂತೆ ಹಲವರು ಹಾಜರಿದ್ದರು.