ಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ‍್ಯ, ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ವ್ಯವಸ್ಥೆಯಾಗಿದೆ.

ಕನ್ನಡಪ್ರಭ ವಾರ್ತೆ ಶಿರಹಟ್ಟಿಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ‍್ಯ, ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ವ್ಯವಸ್ಥೆಯಾಗಿದೆ. ಪ್ರಜಾಪ್ರಭುತ್ವದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ ಕೆ. ರಾಘವೇಂದ್ರ ರಾವು ಹೇಳಿದರು.ಪಟ್ಟಣದ ಫಕ್ಕೀರಪ್ಪ ಭರಮಪ್ಪ ಪೂಜಾರ ಸರಕಾರಿ ಪದವಿ ಪೂರ್ವ ಕಾಲೇಜನಲ್ಲಿ ಸಮಾಜ ಕಲ್ಯಾಣ ಇಲಾಖೆ, ತಾಪಂ, ಪಪಂ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಯಶಸ್ಸು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ.ಸಂವಿಧಾನ ನೀಡಿರುವ ಹಕ್ಕುಗಳನ್ನು ಅರಿತುಕೊಳ್ಳುವುದರ ಜತೆಗೆ ಕರ್ತವ್ಯಗಳನ್ನೂ ಪಾಲಿಸಬೇಕು. ಜಾತಿ, ಧರ್ಮ, ಭಾಷೆ, ಆರ್ಥಿಕ ಸ್ಥಿತಿ ಸೇರಿದಂತೆ ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಮತದಾನವು ಪ್ರಜಾಪ್ರಭುತ್ವದ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಯಾವುದೇ ಆಮಿಷ, ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ತಮ್ಮ ಮತವನ್ನು ವಿವೇಚನೆಯಿಂದ ಚಲಾಯಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಉತ್ತಮ ಆಡಳಿತವನ್ನು ರೂಪಿಸುವಲ್ಲಿ ನಾಗರಿಕರು ತಮ್ಮ ಪಾತ್ರವನ್ನು ನಿರ್ವಹಿಸಬೇಕು ಎಂದು ಕರೆ ನೀಡಲಾಯಿತು.ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳುವುದು ಇಂದಿನ ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ, ವದಂತಿ ಹಾಗೂ ದ್ವೇಷಪೂರಿತ ಮಾಹಿತಿಯನ್ನು ಪರಿಶೀಲಿಸದೆ ನಂಬಬಾರದು. ಸತ್ಯಾಸತ್ಯತೆ ಪರಿಶೀಲಿಸಿ ಜವಾಬ್ದಾರಿಯುತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಆರೋಗ್ಯಕರ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರಲ್ಲಿ ಜಾಗೃತಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿತನ ಅಗತ್ಯ. ಹೀಗಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕೇವಲ ಒಂದು ದಿನ ಆಚರಿಸುವುದಕ್ಕೆ ಸೀಮಿತಗೊಳಿಸದೆ, ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಬೇಕು ಎಂದರು.ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಸಮಾಜದಲ್ಲಿ ಅನ್ಯಾಯ, ಶೋಷಣೆ ಮತ್ತು ತಾರತಮ್ಯವನ್ನು ತಡೆದು ನ್ಯಾಯಯುತ ಸಮಾಜ ನಿರ್ಮಾಣ ಮಾಡಲು ಕಾನೂನಿನ ಸಮಾನ ಅನುಷ್ಠಾನ ಅತ್ಯಂತ ಅಗತ್ಯ. ಕಾನೂನಿಗೆ ಗೌರವ ನೀಡುವುದು ಎಂದರೆ ಸಂವಿಧಾನದ ಆಶಯಗಳಿಗೆ ಗೌರವ ನೀಡಿದಂತೆಯೇ ಆಗಿದೆ ಎಂದು ತಿಳಿಸಿದರು.

ಕಾಲೇಜ ಪ್ರಾಚಾರ್ಯ ಬಿ.ಜಿ. ಗಿರಿತಮ್ಮಣ್ಣವರ, ಬಸವರಾಜ ಕುರಗುಂದ, ಎಸ್.ವೈ. ಗೊಬ್ಬರಗುಂಪಿ ಮಾತನಾಡಿದರು. ಎಂ.ಎಸ್. ಸಂಕನೂರ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ರಾಮಚಂದ್ರ ಪವಾರ, ಬಸವರಾಜ ಅಸುಂಡಿ, ರಾಜು ಶಿರಹಟ್ಟಿ, ಗಿರಿಜಾ ಪೂಜಾರ, ಕವಿತಾ ಮುಗಳಿ, ಸುಜಿತ ಕೋಳಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.