ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ನ್ಯಾಯಾಧೀಶರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ರೋಗಿಗಳಿಂದ ಸೌಲಭ್ಯ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಮಹೇಂದ್ರ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಜಿಯಾ ಕೌಶಿರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಚ್.ಎಸ್.ಕಾವ್ಯಶ್ರೀ ಅವರ ತಂಡ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ, ಹೆರಿಗೆ, ಡಯಾಲಿಸೀಸ್, ಐಸಿಯು, ಜನರಲ್ ವಾರ್ಡ್ ಮುಖ್ಯ ಔಷಧಿ ಉಗ್ರಾಣ, ಅಪರೇಷನ್ ಕೊಠಡಿ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಆಡಳಿತಾಧಿಕಾರಿ ಡಾ.ಸಂಜಯ್ ಸೌಲಭ್ಯದ ಬಗ್ಗೆ ವಿವರಿಸಿದರು. ಒಳ ರೋಗಿಗಳನ್ನು ಆರೋಗ್ಯ ವಿಚಾರಿಸಿದ ನ್ಯಾಯಾಧೀಶರು, ಆಸ್ಪತ್ರೆಯಲ್ಲಿ ನೀಡುವ ಸೌಲಭ್ಯ ಹಾಗೂ ವೈದ್ಯರು ಹಾಗೂ ಆರೋಗ್ಯ ಸಹಾಯಕರ ಸ್ಪಂದನೆ ಯಾವ ರೀತಿ ಇದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದರು.ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ಮಹೇಂದ್ರ ಮಾತನಾಡಿ, ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗಬೇಕೆಂಬ ಆಶಯದೊಂದಿಗೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಾಯಿತು. ಇಲ್ಲಿನ ಆಡಳಿತಾಧಿಕಾರಿಗಳು ಸ್ವಚ್ಚತೆ ಹಾಗೂ ನಿರ್ವಹಣೆ ಉತ್ತಮವಾಗಿದೆ ಎನ್ನುವುದು ಕಂಡು ಬಂದಿದೆ. ರೋಗಿಗಳಿಗೆ ಆರೋಗ್ಯ ಸಿಬ್ಬಂದಿಗೆ ಸರಿಯಾಗಿ ಸ್ಪಂದಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ತಿಳಿವಳಿಕೆ ನೀಡಲಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ರಾದ ನಾಜಿಯಾ ಕೌಶಿರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಕಿತ್ಸೆ ದೊರೆಯುವಂತಾಗಬೇಕು. ಜೊತೆಗೆ ಸ್ವಚ್ಚತೆ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.ಇದೇ ವೇಳೆ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡರ ಭಾವಚಿತ್ರಕ್ಕೆ ನ್ಯಾಯಾಧೀಶರು ಪುಷ್ಪನಮನ ಸಲ್ಲಿಸಿದರು. ನ್ಯಾಯಾಲಯದ ಸಿಬ್ಬಂದಿ, ವಕೀಲರು ಆರೋಗ್ಯ ಆರೋಗ್ಯ ಸಿಬ್ಬಂದಿ ಇದ್ದರು.