ಸಾರಾಂಶ
ಏ.14ರಂದು ನಡೆಯಲಿರುವ ಡಾ.ಅಂಬೇಡ್ಕರ್ ಜಯಂತಿಗೆ ಪ್ರತಿ ಗ್ರಾಪಂನಿಂದ ಒಂದು ಅಂಬೇಡ್ಕರ್ ಪಲ್ಲಕ್ಕಿ ಮೆರವಣಿಗೆಯಲ್ಲಿ ತಾಲೂಕು ಕೇಂದ್ರಕ್ಕೆ ಆಗಮಿಸಿ ಅದ್ಧೂರಿ ಜಯಂತಿ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹೊಸಕೋಟೆ
ಏ.14ರಂದು ನಡೆಯಲಿರುವ ಡಾ.ಅಂಬೇಡ್ಕರ್ ಜಯಂತಿಗೆ ಪ್ರತಿ ಗ್ರಾಪಂನಿಂದ ಒಂದು ಅಂಬೇಡ್ಕರ್ ಪಲ್ಲಕ್ಕಿ ಮೆರವಣಿಗೆಯಲ್ಲಿ ತಾಲೂಕು ಕೇಂದ್ರಕ್ಕೆ ಆಗಮಿಸಿ ಅದ್ಧೂರಿ ಜಯಂತಿ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಅಧಿಕಾರಿಗಳು, ಸಮುದಾಯದ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಪ್ರತಿ ಗ್ರಾಪಂಗೊಂದು ಬೆಳ್ಳಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ತಾಲೂಕು ಕೇಂದ್ರಕ್ಕೆ ಬರಬೇಕು. ತಾಲೂಕು ಕೇಂದ್ರದಲ್ಲಿ ಕಲಾತಂಡಗಳೊಂದಿಗೆ ಮೆರವಣಿಗೆ ಬಳಿಕ ತಾಲೂಕು ಕಚೇರಿ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಮಾಡಬೇಕು ಎಂದರು.
ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿಜಯಕುಮಾರ್, ಬಾಬು ಜಗಜೀವನ್ ರಾಮ್ ಪ್ರತಿಮೆ ಸ್ಥಾಪನೆಗೆ ಜಾಗ ಗುರುತಿಸಬೇಕು. ಶಾಸಕ ಶರತ್ ಬಚ್ಚೇಗೌಡರು ಪ್ರತಿಮೆಗೆ 5 ಲಕ್ಷ ರು. ಅನುದಾನ ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಆಡಿಟೋರಿಯಂ ನಿರ್ಮಾಣ ಆಗಬೇಕು ಎಂದರು.ಬಿಎಂಆರ್ ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜು, ತಹಸೀಲ್ದಾರ್ ಸೋಮಶೇಖರ್, ತಾಪಂ ಸಿಒ ಡಾ. ನಾರಾಯಣಸ್ವಾಮಿ, ಬಿಇಒ ಪದ್ಮನಾಭ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದರಾಜು, ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು ಇತರರಿದ್ದರು.