ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿ. ಡಿ. ದೇವರಾಜ ಅರಸು ತಮ್ಮ ಆಡಳಿತಾವಧಿಯಲ್ಲಿ ಸಮ ಸಮಾಜ ನಿರ್ಮಾಣದಲ್ಲಿ ಮತ್ತು ಹಿಂದುಳಿದ, ದೀನದಲಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಬುಧವಾರ ನಗರದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಉಡುಪಿ ಸರ್ಕಾರಿ ಪಪೂ ಕಾಲೇಜು ಪ್ರಾಂಶುಪಾಲ ನಾಗರಾಜ್ ಅವರು ಅರಸು ಬಗ್ಗೆ ವಿಶೇಷ ಉಪನ್ಯಾಸ ನೀಡಿ, ರಾಜ್ಯದಲ್ಲಿ ಜಮೀನ್ದಾರಿ ಪದ್ಧತಿ, ಜೀತ ಪದ್ಧತಿ ಮತ್ತು ತಲೆಮೇಲೆ ಮಲ ಹೊರುವ ಅನಿಷ್ಟ ಪದ್ಧತಿಗಳ ನಿರ್ಮೂಲನೆ, ವಿದ್ಯಾರ್ಥಿಗಳಿಗೆ ಸಹಾಯಧನ, ನಿರುದ್ಯೋಗಿಗಳಿಗೆ ಸ್ಟೈಫಂಡ್, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯ ಸ್ಥಾಪನೆ, ಕರ್ನಾಟಕ ರಾಜ್ಯ ಎಂಬ ನಾಮಕರಣ ಇತ್ಯಾದಿ ಕಲ್ಯಾಣಕಾರಿ ಕ್ರಮಗಳು ಇಂದಿಗೂ ಮಾದರಿಯಾಗಿದೆ ಎಂದರು.ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್ ಮತ್ತಿತರರಿದ್ದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿ, ನಿಲಯದ ವಿದ್ಯಾರ್ಥಿನಿಯರಾದ ಚೈತ್ರಾ ಕೆ.ಸಿ. ಹಾಗೂ ಗಾನವಿ ನಿರೂಪಿಸಿ, ಉಡುಪಿ ತಾಲೂಕು ಕಲ್ಯಾಣ ಅಧಿಕಾರಿ ಶ್ರೀಕಾಂತ್ ವಂದಿಸಿದರು.