ಹಲ್ಮಿಡಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಓಡಿಸುತ್ತಿದ್ದ ಬೆಣ್ಣೂರು ಗ್ರಾಮದ ನಿವಾಸಿ ಕಾರು ಚಾಲಕ ದೀಕ್ಷಿತ್ (29) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಇದ್ದ ಅನಿ (ಲೋಕೇಶ್ ಪುತ್ರ) ಹಾಗೂ ರುದ್ರೇಶ್ (ಕೆಂಗ ನಾಯಕ ಪುತ್ರ) ಗಂಭೀರವಾಗಿ ಗಾಯಗೊಂಡಿದ್ದು, ಮೊದಲಿಗೆ ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಕೊಡನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಹಲ್ಮಿಡಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಓಡಿಸುತ್ತಿದ್ದ ಬೆಣ್ಣೂರು ಗ್ರಾಮದ ನಿವಾಸಿ ಕಾರು ಚಾಲಕ ದೀಕ್ಷಿತ್ (29) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಇದ್ದ ಅನಿ (ಲೋಕೇಶ್ ಪುತ್ರ) ಹಾಗೂ ರುದ್ರೇಶ್ (ಕೆಂಗ ನಾಯಕ ಪುತ್ರ) ಗಂಭೀರವಾಗಿ ಗಾಯಗೊಂಡಿದ್ದು, ಮೊದಲಿಗೆ ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. *ಶಾಸಕ ಸುರೇಶ್ ಭೇಟಿ, ಸಾಂತ್ವನ* ಅಪಘಾತದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರು ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈಗಾಗಲೇ ಸರ್ಕಲ್ ಇನ್ಸ್ಪೆಕ್ಟರ್‌ ರೇವಣ್ಣ ಅವರು ಸ್ಥಳ ಪರಿಶೀಲನೆ ನಡೆಸಿ ಅಪಘಾತ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಿದ್ದಾರೆ ಎಂದು ತಿಳಿಸಿದರು. “ಈ ರೀತಿಯ ದುರ್ಘಟನೆಗಳು ಮರುಕಳಿಸಬಾರದು. ಅಪಘಾತಕ್ಕೆ ಬೇರೆ ಕಾರಣಗಳಿದ್ದರೂ, ಮುಂದಿನ ದಿನಗಳಲ್ಲಿ ಅಪಾಯಕಾರಿಯಾದ ಸ್ಥಳಗಳಲ್ಲಿ ಹಂಪ್ಸ್ ಅಳವಡಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ನಾಗರಾಜ್ ಕಾರ್ವೆ ಅವರು ಮೃತರ ಅಂತ್ಯಸಂಸ್ಕಾರಕ್ಕಾಗಿ ತಾತ್ಕಾಲಿಕವಾಗಿ ₹25,000 ಪರಿಹಾರಧನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.ರಸ್ತೆ ಸುರಕ್ಷತೆಗೆ ಕ್ರಮ:

ಇತ್ತೀಚೆಗೆ ಕಿತ್ತನಹಳ್ಳಿ ಪ್ರದೇಶದಲ್ಲಿಯೂ ಅಪಘಾತ ಸಂಭವಿಸಿದ್ದ ಹಿನ್ನೆಲೆಯಲ್ಲಿ ಅಲ್ಲಿ ಪರಿಶೀಲನೆ ನಡೆಸಿ ಹಂಪ್ಸ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ. ಕೊಡನಹಳ್ಳಿ ಕ್ರಾಸ್ ಸೇರಿದಂತೆ ಅಪಾಯಕಾರಿಯಾದ ಸ್ಥಳಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸುರೇಶ್ ತಿಳಿಸಿ ನೊಂದ ಕುಟುಂಬಕ್ಕೆ ಧನ ಸಹಾಯ ಮಾಡಿದರು.ಈ ಸಂದರ್ಭದಲ್ಲಿ ಪಿಐ ರೇವಣ್ಣ, ವೈದ್ಯಾಧಿಕಾರಿ ಸತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.