ವಸತಿ ಪ್ರವೇಶ ವಿಳಂಬಕ್ಕೆ ಎಬಿವಿಪಿ ಖಂಡನೆ

| Published : Jul 04 2024, 01:12 AM IST

ಸಾರಾಂಶ

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಗ್ರಾಮೀಣ ಭಾಗದಿಂದ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಬೇಕೆಂಬ ಆಶಯ ಇಟ್ಟುಕೊಂಡು ನಗರ ಪ್ರದೇಶಗಳಿಗೆ ಬರುತ್ತಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನ ಒದಗಿಸುವುದು ಆದ್ಯ ಕರ್ತವ್ಯವಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾದ ಮೂರು ತಿಂಗಳಗಳವರೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ. ಜೂನ್ ತಿಂಗಳಲ್ಲಿ ಶಾಲೆ- ಕಾಲೇಜುಗಳು ಪ್ರಾರಂಭವಾದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುವುದರಲ್ಲಿ ಸೆಪ್ಟಂಬರವರೆಗೂ ತಲುಪುವ ಹಂತವನ್ನು ಸರ್ಕಾರ ಮತ್ತು ಅಧಿಕಾರಿಗಳು ಮಾಡುತ್ತಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಮೂರು ತಿಂಗಳುಗಳ ಕಾಲ ಎಲ್ಲಿ ಉಳಿದುಕೊಂಡು ಶಿಕ್ಷಣವನ್ನು ಪಡೆಯಬೇಕು ಎಂಬುವ ಸಾಮಾನ್ಯ ಜ್ಞಾನವು ಸರ್ಕಾರಗಳಿಗೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ವರ್ಷದ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಬೇಕು ಎಂದು ಆಗ್ರಹಪಡಿಸಿದರು.

ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ, ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಶೇ.೪೦ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳನ್ನ ಕಲ್ಪಿಸಿಕೊಡುವ ವ್ಯವಸ್ಥೆ ಈಗ ನಮ್ಮ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಲಭ್ಯವಿದೆ. ಆದರೆ ಇನ್ನುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿ ತಮ್ಮ ಉನ್ನತ ಶಿಕ್ಷಣವನ್ನ ಪಡೆಯಲು ಕಷ್ಟಕರವಾಗುತ್ತಿದೆ. ಸರ್ಕಾರ ಕೂಡಲೇ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ನೀಡಿ ಹಾಸ್ಟೆಲ್‌ಗಳ ಸಂಖ್ಯೆಗಳನ್ನ ಹೆಚ್ಚಳ ಮಾಡಬೇಕು ಹಾಗೂ ಈಗಿರುವ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಸಂಚಾಲಕ ಸಂದೀಪ ಅರಳಗುಂಡಗಿ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೇ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾರ್ಥಿನಿಧಿಯನ್ನ ರದ್ದುಗೊಳಿಸಿರುವುದು ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ಮಲ್ಲಿಕಾರ್ಜುನ ಮಾಳಿ, ಸುಜ್ಞಾತಾ ಕುಲಕರ್ಣಿ, ಕವಿತಾ ಬಿರಾದಾರ, ಸ್ನೇಹಾ ಚವ್ಹಾಣ, ಐಶ್ವರ್ಯ ಆಸಂಗಿ, ಶಿಲ್ಪಾ ಪೂಜಾರಿ, ಶಿವನಗೌಡ ಬಿರಾದಾರ, ಶ್ರೀಕಾಂತ ರೆಡ್ಡಿ, ಪ್ರವೀಣ ಬಿರಾದಾರ, ಮಹಾಂತೇಶ ತಳವಾರ, ಅಭಿಷೇಕ ಬಿರಾದಾರ, ವಿನಾಯಕ, ಸೋಮು, ರವಿ ಹಿಪ್ಪರಗಿ, ಅಭಿಷೇಕ ಬಡಿಗೇರ, ಚಂದನಕೋಳಿ, ಬಸವರಾಜ ಬಿಜ್ಜರಗಿ, ಶ್ರೀಕಾಂತ, ಅನೀಲ ನಾಯ್ಕೋಡಿ, ಚಂದ್ರಕಾಂತ ಹೂಗಾರ, ಅಜೀತ ಉಪಸ್ಥಿತರಿದ್ದರು.