ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿ ದಾಖಲಾತಿ ಶುಲ್ಕ ಪಡೆಯುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿ ದಾಖಲಾತಿ ಶುಲ್ಕ ಪಡೆಯುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ನವನಗರ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಸ್ಥಳಕ್ಕೆ ವಿವಿ ಕುಲಪತಿ ಬರಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು.ವಿಶ್ವವಿದ್ಯಾಲಯದ ದಾಖಲಾತಿಯ ಶುಲ್ಕ ₹3700ರಿಂದ ₹8580ಗೆ ಏರಿಸಲಾಗಿದೆ. ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಹೆಚ್ಚಿಸಲಾದ ಶುಲ್ಕ ವಿದ್ಯಾರ್ಥಿಗಳಿಗೆ ಮರುಪಾವತಿಸಲು ಆದೇಶ ನೀಡಿದ್ದರೂ ವಿಶ್ವವಿದ್ಯಾಲಯ ಪಾಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಪರೀಕ್ಷಾ ಶುಲ್ಕವನ್ನು ₹260ರಿಂದ ₹368ಗೆ ಏರಿಸಲಾಗಿದೆ. ತಕ್ಷಣ ಈ ನಿರ್ಧಾರ ಕೈಬಿಡಬೇಕು. ಯುಜಿಸಿ ನಿಯಮಾವಳಿ ಪ್ರಕಾರ ೩ ವರ್ಷಕ್ಕೆ ಶೇ. 15ರಷ್ಟು ಹೆಚ್ಚಿಸಲು ಅವಕಾಶವಿದೆ. ಆದರೆ ವಿಶ್ವವಿದ್ಯಾಲಯ ಶೇ. 31ರಷ್ಟು ಹೆಚ್ಚಿಸಿದೆ. 2021-22, 2022-23 ಹಾಗೂ 2023-24 ಶೈಕ್ಷಣಿಕ ಸಾಲಿನಲ್ಲಿ ವಿನಾಯಿತಿ ಪರೀಕ್ಷಾ ಶುಲ್ಕ ಪಾವತಿಸಲು ಎಸ್‌ಸಿ, ಎಸ್‌ಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಈ ವರ್ಷ ಹಿಂದಿನ ಸಾಲಿನ ಪೂರ್ಣ ಶುಲ್ಕ ಪಾವತಿಸಲು ಸೂಚಿಸಿರುವುದು ಖಂಡನೀಯ.

ಪ್ರಸಕ್ತ ವರ್ಷದ ಘಟಿಕೋತ್ಸವದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ನೀಡಬೇಕು. ಘಟಿಕೋತ್ಸವ ಶುಲ್ಕವನ್ನು ಸಮನಾಗಿ ಪರಿಗಣಿಸಿ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿವಿ ಕುಲಪತಿ ಡಿ.ಬಸವರಾಜು ಅವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಡಾಂಗೆ, ಅಭಿಷೇಕ್ ದೊಡ್ಡಮನಿ, ಸನತ್ ತೋಟಿಗೇರ್, ಮಣಿಕಂಠ ದೇಸಾಯಿ, ಲೋಕೇಶ್, ಫಣಿ ರಾಘವೇಂದ್ರ, ಅಮರ, ದರ್ಶನ್, ಇಶಿಕಾ, ಸಂಜನಾ, ಮನೋಜ್ ಮುಂತಾದವರು ಉಪಸ್ತಿತರಿದ್ದರು.