ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಹಲವು ಸಮಸ್ಯೆಗಳನ್ನು ಪರಿಹರಿಸಬೇಕು. ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಶುಕ್ರವಾರ ಎಬಿವಿಪಿ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳ ಪಾಲಿಗೆ ಮೌಲ್ಯಯುತ ಶಿಕ್ಷಣವೆಂಬುದು ಮಸುಕಾಗಿದೆ. ರಾಜ್ಯದಲ್ಲಿನ ೪೬೦ಕ್ಕೂ ಹೆಚ್ಚಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು. ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ ಎಂದರು.
ವಿಳಂಬ ನೀತಿ: ಈ ಸಮಸ್ಯೆಗೆ ಪರಿಹಾರವಾಗಿ ಕಾಯಂ ಉಪನ್ಯಾಸಕರ ಬದಲು ಸರ್ಕಾರ ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿ ಸಮಾಧಾನ ಪಟ್ಟುಕೊಳ್ಳುತ್ತಿತ್ತು. ಆದರೆ ಅತಿಥಿ ಉಪನ್ಯಾಸಕರ ನೇಮಕದಲ್ಲಿಯೂ ಕೂಡ ವಿಳಂಬ ನೀತಿ ಅನುಸರಿಸುವುದು ನಡೆದು ಬಂದಂತಹ ಪ್ರತೀತಿಯಂತೆ ಇತ್ತೀಚೆಗೆ ನೇಮಕಾತಿ ಆದೇಶ ಹೊರ ಬಿದ್ದಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯೂ ಕೂಡ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ತರಗತಿಗಳು ಶುರುವಾಗಿ ೫೦ ದಿನಗಳು ಕಳೆದ ನಂತರ ನೇಮಕಾತಿ ಮಾಡಿರುವುದು ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಂತಿದೆ. ರಾಜ್ಯದ ವಿದ್ಯಾರ್ಥಿಗಳ ಸಮಯ ಹಾಗೂ ತರಗತಿಗಳ ನಷ್ಟಕ್ಕೆ ಹೊಣೆ ಯಾರು? ಆದ್ದರಿಂದ ಸರ್ಕಾರ ಕಾಯಂ ಉಪನ್ಯಾಸಕರ ನೇಮಕಾತಿಗೆ ಆದ್ಯತೆ ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದರು.ತಂತ್ರಾಂಶದ ಬಳಕೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯಗಳ ನಡುವೆ ಸಮನ್ವಯದ ಜೊತೆಗೆ ತಾಂತ್ರಿಕ ಪರಿಣಿತರ ಕೊರತೆಯಿಂದಾಗಿ ತಂತ್ರಾಂಶದ ಸುಲಭ ಬಳಕೆ ಅಸಾಧ್ಯವಾಗಿದೆ. ಆದ್ದರಿಂದ ಅಧಿಕಾರಿಗಳು ಸಮಜಾಯಿಷಿ ನೀಡಿ ಹೊಣೆಗಾರಿಕೆಯಿಂದ ನುಣಚಿಕೊಳ್ಳದೆ ಜವಾಬ್ದಾರಿಯುತವಾಗಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕೆಂದು ಹೇಳಿದರು. ಪದವಿ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವ ವಿಚಾರದ ಕುರಿತಾಗಿ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕೆಂದು ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುವ ಇನ್ನಿತರ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಅದರೊಂದಿಗೆ ಕಾಯಂ ಉಪನ್ಯಾಸಕರ ನೇಮಕಾತಿಗೆ ಅತಿ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ ಕಾಲೇಜುಗಳಲ್ಲಿನ ಮೌಲ್ಯಯುತ ಶಿಕ್ಷಣದ ಕೊರತೆಯನ್ನು ನೀಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನವನ್ನು ಮಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ತನ್ನ ಬದ್ಧತೆಯನ್ನು ಖಚಿತಪಡಿಸಬೇಕು ಎಂದರು.
ಇದೇ ವೇಳೆ ಎಬಿವಿಪಿ ಜಿಲ್ಲಾ ಸಂಘಟನ ಕಾರ್ಯದರ್ಶಿ ಶ್ರೀನಿವಾಸ್, ವಿಭಾಗ ವಿದ್ಯಾರ್ಥಿ ಪ್ರಮುಖ್ ಗಾನ, ಜಿಲ್ಲಾ ವಿಸ್ತಾರಕ್ ಸುಶ್ಮಿತಾ, ಕಾರ್ಯಕರ್ತ ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.*ಬಾಕ್ಸ್ನ್ಯೂಸ್: ವಿವಿಗಳಲ್ಲಿ ಸಾಲು ಸಾಲು ಸಮಸ್ಯೆಗಳುಕರ್ನಾಟಕದ ಸಾಂಪ್ರದಾಯಿಕ ಪದವಿ ನೀಡುವ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕರ ಕೊರತೆ ಅಷ್ಟೇ ಅಲ್ಲದೆ ಅನುದಾನ ಸಮಸ್ಯೆ, ಮೂಲಭೂತ ಸೌಕರ್ಯಗಳ ಸಮಸ್ಯೆ, ಪೀಠೋಪಕರಣಗಳ ಕೊರತೆ, ಪ್ರಾಯೋಗಿಕ ಉಪಕರಣಗಳ ಕೊರತೆ ಹೀಗೆ ಸಾಲು ಸಾಲು ಸಮಸ್ಯೆಗಳು ಇವೆ. ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ನೀಡುತ್ತದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.