ಕೊಪ್ಪಳ: ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಭಾವನೆ ಬೆಳೆಸುವ ಕೆಲಸ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 78 ವರ್ಷಗಳಿಂದ ದೇಶಾದ್ಯಂತ ನಿರಂತರವಾಗಿ ಮಾಡುತ್ತಿದ್ದು, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಸಾಧ್ಯ ಎಂಬ ಆಶಯದೊಂದಿಗೆ ಸಂಘಟನೆ ಕಾರ್ಯ ನಿರ್ವಹಿಸುತ್ತಿದೆ ಎಂದು ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಹೇಳಿದರು.

ನಗರದ ಎಸ್.ಎ.ನಿಂಗೋಜಿ ಆಯುರ್ವೇದಿಕ ಕಾಲೇಜಿನಲ್ಲಿ ಎಬಿವಿಪಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಷ್ಟ್ರ ನಿರ್ಮಾಣ ಎಂದರೆ ಕೇವಲ ಭೌತಿಕ ಅಭಿವೃದ್ಧಿಯಲ್ಲ. ಪ್ರತಿಯೊಬ್ಬ ನಾಗರಿಕನಲ್ಲೂ ದೇಶದ ಪರಂಪರೆ, ಸಂಸ್ಕೃತಿ, ಸಂಸ್ಕಾರ ಹಾಗೂ ಸಂವಿಧಾನದ ಆಶಯಗಳ ಬಗ್ಗೆ ಅರಿವು ಮೂಡಿಸಿ ರಾಷ್ಟ್ರೀಯ ಪ್ರಜ್ಞೆ ಬಲಪಡಿಸುವುದೇ ನಿಜವಾದ ರಾಷ್ಟ್ರ ನಿರ್ಮಾಣವಾಗಿದೆ. ಜಾತಿ,ಮತ, ಭಾಷೆಯ ಭೇದವಿಲ್ಲದೆ ಎಲ್ಲರೂ ಒಂದಾಗಿ ಬದುಕುವ ವಾತಾವರಣ ಕಾಲೇಜು ಕ್ಯಾಂಪಸ್‌ಗಳಲ್ಲಿ ನಿರ್ಮಿಸಲು ಎಬಿವಿಪಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಸುಮಂಗಲ ಮಾತನಾಡಿ, ವಿದ್ಯಾರ್ಥಿಗಳ ಬಸ್ ಪಾಸ್ ಸಮಸ್ಯೆ, ಬಸ್‌ಗಳ ಕೊರತೆ, ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ವಿಶ್ವವಿದ್ಯಾಲಯಗಳಿಗೆ ಸಮರ್ಪಕ ಅನುದಾನ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ಎಬಿವಿಪಿ ಹಲವು ಯಶಸ್ವಿ ಹೋರಾಟ ನಡೆಸಿದೆ ಎಂದು ಹೇಳಿದರು.

ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಕ್ರೀನ್ ಟೈಮ್ ಹೆಚ್ಚಾಗುತ್ತಿರುವುದು, ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸವಾಲಾಗಿದೆ. ಈ ಹಿನ್ನೆಲೆ ದೇಶಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಆಟೋಟ, ಕಲೆ, ಅಧ್ಯಯನ, ಸಂವಾದ, ಸೇವಾ ಚಟುವಟಿಕೆ, ನಾವೀನ್ಯತೆ ಹಾಗೂ ಭಾರತೀಯ ಸಂಸ್ಕೃತಿಯತ್ತ ಆಕರ್ಷಿಸುವ ಜಾಗೃತಿ ಕಾರ್ಯಕ್ರಮ ಎಬಿವಿಪಿ ನಡೆಸುತ್ತಿದೆ ಎಂದು ತಿಳಿಸಿದರು.


ಎಬಿವಿಪಿಯ ಜಿಲ್ಲಾ ಸಂಚಾಲಕ ಹಮ್ಮಿಗೇಶ ಎಸ್.ಪಿ.ಮಾತನಾಡಿ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿಗೆ ಅನುಗುಣವಾಗಿ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಬಿವಿಪಿ ವಿವಿಧ ಆಯಾಮಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಪರಿಸರ ಹಾಗೂ ಜಲ ಸಂರಕ್ಷಣೆಗಾಗಿ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್, ಸೇವಾ ಮನೋಭಾವ ಬೆಳೆಸಲು ಸ್ಟೂಡೆಂಟ್ಸ್ ಫಾರ್ ಸೇವಾ, ಕ್ರೀಡಾ ಆಸಕ್ತರಿಗಾಗಿ ಖೇಲೋ ಭಾರತ, ಕಲೆ ಮತ್ತು ಸಂಸ್ಕೃತಿಗಾಗಿ ರಾಷ್ಟ್ರೀಯ ಕಲಾ ಮಂಚ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸವಿಸ್ಕಾರ, ಔಷಧ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಫಾರ್ಮವಿಷನ್, ಕೃಷಿ ವಿದ್ಯಾರ್ಥಿಗಳಿಗಾಗಿ ಅಗ್ರಿವಿಷನ್, ಐಐಟಿ ಮತ್ತು ಐಐಎಂ ವಿದ್ಯಾರ್ಥಿಗಳಿಗಾಗಿ ಥಿಂಕ್ ಇಂಡಿಯಾ, ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಶೋಧ, ಆಯುರ್ವೇದ ವಿದ್ಯಾರ್ಥಿಗಳಿಗಾಗಿ ವಿಜ್ಞಾಸ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಮೆಡಿವಿಷನ್ ಸೇರಿದಂತೆ ವಿವಿಧ ವೇದಿಕೆಗಳ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎಬಿವಿಪಿ ಶ್ರಮಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಬಿವಿಪಿ ಪದಾಧಿಕಾರಿ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.