ಸವಾಲಾಗಿ ಸ್ವೀಕರಿಸಿ ವಿಧಾನ ಪರಿಷತ್ ಚುನಾವಣೆ ಗೆಲ್ಲಬೇಕು: ಕೋಟಾ ಶ್ರೀನಿವಾಸ ಪೂಜಾರಿ

| Published : May 27 2024, 01:01 AM IST

ಸವಾಲಾಗಿ ಸ್ವೀಕರಿಸಿ ವಿಧಾನ ಪರಿಷತ್ ಚುನಾವಣೆ ಗೆಲ್ಲಬೇಕು: ಕೋಟಾ ಶ್ರೀನಿವಾಸ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಸವಾಲಾಗಿ ಸ್ವೀಕರಿಸಿ ಗಟ್ಟಿಯಾಗಿ ನಿಂತು ವಿಧಾನ ಪರಿಷತ್ತು ಚುನಾವಣೆಯನ್ನು ಗೆಲ್ಲಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಸವಾಲಾಗಿ ಸ್ವೀಕರಿಸಿ ಗಟ್ಟಿಯಾಗಿ ನಿಂತು ವಿಧಾನ ಪರಿಷತ್ತು ಚುನಾವಣೆಯನ್ನು ಗೆಲ್ಲಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಭಾನುವಾರ ಭಾರತೀಯ ಜನತಾ ಪಾರ್ಟಿ ತರೀಕೆರೆ ಮಂಡಲದಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಈ ಚುನಾವಣೆ ಕಾರ್ಯಕರ್ತರ ಚುನಾವಣೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಖ್ಯಾತ ಮಕ್ಕಳ ವೈದ್ಯ ಡಾ.ಧನಂಜಯ ಸರ್ಚಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಎಸ್.ಎಲ್.ಬೋಜೇಗೌಡ ಇಬ್ಬರನ್ನು ಗೆಲ್ಲಿಸಬೇಕು. ವಿಧಾನ ಪರಿಷತ್ತಿನಲ್ಲಿ ಕೂಲಂಕಷವಾಗಿ ಎಲ್ಲ ವಿಚಾರಗಳು ಚರ್ಚೆಯಾಗುತ್ತದೆ. ಭಾರತೀಯ ಜನತಾ ಪಾರ್ಟಿಯ ಎಲ್ಲ ಒಳ್ಳೆಯ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದೆ. ಅಲ್ಲದೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಛಿದ್ರವಾಗಿದೆ. ಸರ್ಕಾರವೇ ಇಲ್ಲದಂತಾಗಿದೆ. ಬಿಜೆಪಿ ಪಕ್ಷದ ಮತ್ತು ಜೆಡಿಎಸ್ ನ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳು ಅಲ್ಲೋಲ ಕಲ್ಲೋಲ ಮಾಡುತ್ತಿವೆ, ಅಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಬೇಕು. ಅದಕ್ಕಾಗಿ ಹೋರಾಟ ಮಾಡಬೇಕು. ಬಿಜೆಪಿ ಪಕ್ಷದ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಮತದಾರರ ಪಟ್ಟಿ ಸಿದ್ಧವಾಗಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿ ಗೆಲ್ಲಿಸಬೇಕು.ಮಾಜಿ ಸಚಿವ ಸುನೀಲ್ ಕುಮಾರ್‌ ತರೀಕೆರೆ ತಾಲೂಕಿಗೆ ಎರಡು ಎಂ.ಯು.ಎಸ್.ಎಸ್.ನ್ನು ಮಂಜೂರು ಮಾಡಿಕೊಟ್ಟಿದ್ದಕ್ಕಾಗಿ ಮಾಜಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.ಭಾರತೀಯ ಜನತಾ ಪಾರ್ಟಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ ಪಕ್ಷದ ಕಾರ್ಯಕರ್ತರು, ಮುಖಂಡರು, ಹಿರಿಯರು ತೀರ್ಮಾನಿಸಿ ನನಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ, ನಾನು ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ ಇಬ್ಬರು ಪ್ರಾಮಾಣಿಕವಾಗಿ ನಿಮ್ಮ ಧ್ವನಿಯಾಗಿ ಕೆಲಸ ಮಾಡತ್ತೇವೆ. ಇಬ್ಬರನ್ನು ಗೆಲ್ಲಿಸಬೇಕು ಎಂದರು.ವಿಧಾನ ಪರಿಷತ್ತು ಶಾಸಕರು, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ ಇದು ವಿಶೇಷ ಚುನಾವಣೆಯಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಎರಡೂ ಜವಾಬ್ದಾರಿಯುತವಾದದ್ದು, ಶಿಕ್ಷಣ ಮತ್ತು ಆರೋಗ್ಯ ಸಮೃದ್ಧವಾಗಿರಬೇಕು. ಶಿಕ್ಷಕರ ಧ್ವನಿಯಾಗಿ ಕೆಲಸ ನಿರ್ವಹಿಸುತ್ತೇನೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಯಾದ ತಮಗೆ ಮತ್ತು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಇಬ್ಬರಿಗೂ ಮತ ನೀಡಿ ಗೆಲ್ಲಿಸಬೇಕು ಎಂದು ಹೇಳಿದರು. ಎಂಎಲ್‌ ಸಿ ಅರುಣ್ ಕುಮಾರ್, ಮಾಜಿ ಶಾಸಕ ಎಸ್.ಎಂ.ನಾಗರಾಜ್, ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಎನ್.ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ನರೇಂದ್ರ, ಜಿಪಂ ಮಾಜಿ ಅಧ್ಯಕ್ಷೆ ಚೈತ್ರಶ್ರೀ, ಜಿಪಂ ಸದಸ್ಯ ಕೆ.ಎಚ್.ಮಹೇಂದ್ರ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ರಾಜಶೇಖರ್, ಮುಖಂಡರಾದ ಕೆ.ಆರ್.ದೃವಕುಮಾರ್, ಎ,ಸಿ.ಚಂದ್ರಪ್ಪ, ಅ್ಜಜಂಪುರ ಶಿವಾನಂದ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

---ಬಾಕ್ಸ್‌---

ರಾಜ್ಯದಲ್ಲಿ ಅಸಮರ್ಥ ಸಂಪುಟವಿದೆ

ವಿಧಾನ ಪರಿಷತ್ತು ಚುನಾವಣೆ ಮಹತ್ವದಿಂದ ಕೂಡಿದೆ. ಭಾರತೀಯ ಜನತಾ ಪಾರ್ಟಿಗೆ ವಿಧಾನ ಪರಿಷತ್ತಿನಲ್ಲಿ ಒಳ್ಳೆಯ ಸಂಖ್ಯೆ ಅಗತ್ಯವಿದೆ. ಪಾರಂಪರಿಕವಾಗಿ ಬಿಜೆಪಿ ಬೆಂಬಲವಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದರು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ. ಈ ಪಕ್ಷದ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕು. ರಾಜ್ಯದಲ್ಲಿ ಸರ್ಕಾರ ಇದೆ ಎಂದೇ ಅನಿಸುತ್ತಿಲ್ಲ. ಯಾವ ಇಲಾಖೆಯದೂ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ಅಸಮರ್ಥ ಸಂಪುಟ ಇದೆ ಎಂದು ಹೇಳಿದ ಅವರು ವಿಧಾನ ಪರಿಷತ್‌ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್‌ ಇಬ್ಬರು ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

26ಕೆಟಿಆರ್.ಕೆ.01ಃ

ತರೀಕೆರೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಉದ್ಘಾಟನೆಯನ್ನು ಮಾಜಿ ಸಚಿವ ಸುನೀಲ್ ಕುಮಾರ್ ನೆರವೇರಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಡಿ.ಎಸ್.ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ತಾ. ಬಿಜೆಪಿ ಮಂಡಲ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ ಮತ್ತಿತರರು ಇದ್ದರು.