ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ನಡೆದ ಅಪಘಾತದಲ್ಲಿ ಮೃತ ಪಟ್ಟ ಬಾಲಕಿ ಕುಟುಂಬಕ್ಕೆ ಪರಿಹಾರ ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚ ಭರಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ಗುರುವಾರ ಅಪಘಾತಕ್ಕೀಡಾಗಿ ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಚಿಕ್ಕಮಗಳೂರಿನಿಂದ ಡಿಎಚ್.ಓ ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಸಹ ಇಲ್ಲಿಗೆ ಭೇಟಿ ನೀಡಿದ್ದಾರೆ. ವರದಿ ಸಿದ್ದಪಡಿಸಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ನೀಡುವಂತೆ ಅವರಿಗೆ ಸೂಚನೆ ನೀಡಿದ್ದೇನೆ. ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಮಾತನಾಡುತ್ತೇನೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಹಾಗೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯವರನ್ನು ಸಹ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಿ ಇವರನ್ನು ಮನೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುವುದು. ಆಕ್ಸಿಡೆಂಟ್ ಮಾಡಿರುವವರ ಬಗ್ಗೆ ನಮಗೆ ಸ್ವಲ್ಪವೂ ಕನಿಕರ ಇಲ್ಲ. ನಮ್ಮ ಸಹಕಾರ ಇರುವುದು ಅಪಘಾತದಲ್ಲಿ ಗಾಯಗೊಂಡ ವರಿಗೆ ಮಾತ್ರ ಎಂದರು.ಅಹಿತಕರ ಘಟನೆಯಲ್ಲಿ ಒಂದು ಕುಟುಂಬದ ಜನರಿಗೆ ಹೆಚ್ಚಿನ ತೊಂದರೆ ಆಗಿದೆ. ಓರ್ವ ಬಾಲಕಿ ಮೃತಪಟ್ಟಿದ್ದಾಳೆ. ಹಾಸನ ದಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ಜನರ ಪೈಕಿ ಶುಕ್ರವಾರ ಚೇತನ್ ಎನ್ನುವವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ. ಇನ್ನುಳಿದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚಕ್ಕೆ ಒತ್ತಡ ಹಾಕಬಾರದೆಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಪೋಟೋ ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಶಾಸಕ ಎಚ್.ಡಿ. ತಮ್ಮಯ್ಯ ಗುರುವಾರ ಭೇಟಿ ಮಾಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.