ಸಾರಾಂಶ
ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ, ಆದ್ದರಿಂದ ಅವರು ತುಳುವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಜಿಲ್ಲಾ ತುಳುನಾಡ ಧರ್ಮ ಜಾಗರಣ ವೇದಿಕೆ ಆಗ್ರಹಿಸಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ತುಳುನಾಡಿನ ದೈವಾರಾಧನೆಯ ಭಾಗವಾದ ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ, ಆದ್ದರಿಂದ ಅವರು ತುಳುವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಜಿಲ್ಲಾ ತುಳುನಾಡ ಧರ್ಮ ಜಾಗರಣ ವೇದಿಕೆ ಆಗ್ರಹಿಸಿದೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಉಡುಪಿ ಜಿಲ್ಲಾ ಪ್ರಮುಖ್ ಉದಯಕುಮಾರ್ ಶೆಟ್ಟಿ ಕಳೆದ ಮಂಗಳವಾರ ಬ್ರಹ್ಮಾವರದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪ್ರಸಾದ್ ಕಾಂಚನ್ ಅವರು, ಉಡುಪಿಯ ಶಾಸಕರು ಕೋಳಿ ಅಂಕ ಆಚರಣೆಗೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿ ಉಡುಪಿ ಜಿಲ್ಲೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪಿಸಿದ್ದರು.ಪ್ರಸಾದ್ ಕಾಂಚನ್ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದಾರೋ, ಅವರಿಗೆ ತುಳುನಾಡಿನ ಆಚರಣೆಗಳ ಮಾಹಿತಿ ಇಲ್ಲವೋ, ರಾಜಕೀಯ ಅನುಭವದ ಕೊರತೆಯೋ, ಅಲ್ಪಸಂಖ್ಯಾತರ ಓಲೈಕೆಗಾಗಿ ಇಂತಹ ಮಾತುಗಳನ್ನು ಹೇಳಿದ್ದಾರೋ ಗೊತ್ತಾಗುತ್ತಿಲ್ಲ. ಪ್ರಸಾದ್ ಕಾಂಚನ್ ಈ ಅಪ್ರಬುದ್ಧ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದವರು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಧರ್ಮೇಂದ್ರ ಎಮ್. ಡಿ., ಅರುಣ್ ಕುಂದರ್, ಶರತ್ ಕೆಮ್ಮಣ್ಣು ಉಪಸ್ಥಿತರಿದ್ದರು.