ಕನ್ನಡಪ್ರಭ ವಾರ್ತೆ ಮಡಿಕೇರಿ

ವಿದ್ಯಾರ್ಥಿಗಳು ಶಿಕ್ಷಣದಂತೆ ಕ್ರೀಡೆಗೂ ಮಹತ್ವ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಕೀರ್ತಿ ಗಳಿಸಬೇಕು ಎಂದು ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾದ ಅಂಕಿತಾ ಸುರೇಶ್ ಹೇಳಿದರು.ನಗರದ ಕೊಡಗು ವಿಶ್ವ ವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ‘ಕ್ರೀಡೆ ಮತ್ತು ಪ್ರತಿಭೋತ್ಸವ’ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು, ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಶಾಲೆ, ಕಾಲೇಜುಗಳಲ್ಲಿ ನಡೆಯುವ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುತ್ತವೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತ್ತಿರಬೇಕು ಮತ್ತು ಮಾದರಿಯಾಗಿರಬೇಕು ಎಂದು ಹೇಳಿದರು.ಹಳೆಯ ವಿದ್ಯಾರ್ಥಿಗಳ ಸಂಘ ಸೇರಿದಂತೆ ದಾನಿಗಳ ಸಹಕಾರವೂ ಕಾಲೇಜಿಗೆ ದೊರೆಯುತ್ತಿದೆ. ಪ್ರತಿಯೊಬ್ಬ ವ್ಯಕ್ತಿ ಸಮಾಜದಲ್ಲಿ ಅಳಿಲು ಸೇವೆಯನ್ನಾದರೂ ಮಾಡುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರು ಸೋಲು ಪಾಠವನ್ನು ಕಲಿಸುತ್ತದೆ. ಗೆಲುವಿನ ಮೆಟ್ಟಿಲಾಗುತ್ತದೆ. ಗೆದ್ದವರಿಗೆ ಅಹಂಕಾರ ಬಂದರೆ ಅದು ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು.ಗುರಿ ಇದ್ದರೆ ಮಾತ್ರ ಸಾಧನೆ ಸಾಧ್ಯ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ. ಇದರ ಅನಾವರಣಕ್ಕೆ ಕಾಲೇಜು ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ. ಕಾಲೇಜಿನ ಕ್ರೀಡೋತ್ಸವಗಳು ರಾಜ್ಯ, ರಾಷ್ಟ್ರ, ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೆ ಮೊದಲ ಹೆಜ್ಜೆಯಾಗಿದೆ ಹಾಗೂ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಗುರಿ, ಕನಸು ಮತ್ತು ಶಿಸ್ತು ಇದ್ದಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಲಭಿಸಲು ಸಾಧ್ಯ ಎಂದರು.ಕೊಡಗು ವಿವಿಯ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಮೇಚಿರ ರವಿಶಂಕರ್ ನಾಣಯ್ಯ, ಸಹಪಠ್ಯ ಚಟುವಟಿಕೆ ವಿಭಾಗದ ಸಂಚಾಲಕಿ ಡಾ. ಎಚ್.ಕೆ. ರೇಣು ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ. ಶ್ರೀಧರ ಹೆಗಡೆ, ಕ್ರೀಡಾ ವಿಭಾಗದ ಸಂಯೋಜಕ ಡಾ. ತಳವಾರ ಬಿ.ಎಚ್., ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸಾಂಸ್ಕೃತಿಕ ಕಾರ್ಯದರ್ಶಿಗಳು, ಎನ್ನೆಸ್ಸೆಸ್‌ ನಾಯಕರು, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು. ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾದ ಅಂಕಿತಾ ಬಿ.ಎಸ್., ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಸಮಾಜ ಸೇವಕ ಪ್ರಸನ್ನ ಭಟ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.