ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೋಮವಾರ ನಡೆದ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆ ಮೆರೆಯಬೇಕು. ಜಿಲ್ಲೆಯ 5 ತಾಲೂಕುಗಳಲ್ಲಿ ವಿಕಲಚೇತನರ ಕ್ರೀಡಾಕೂಟ ಆಯೋಜಿಸಲಾಗಿದ್ದು, ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ತಾಲೂಕು ಮಟ್ಟದಲ್ಲಿ ಆಯೋಜಿಸಿದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿ ಇದೀಗ ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗಿಯಾಗಿರುವ ತಾವುಗಳು, ವಿಜೇತರಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ, ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡೆಗಳು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ವಿಶೇಷ ಚೇತನರು ಕಿಳರಿಮೆ ತೊಡೆದು ಹಾಕಿ ಎಂದು ಹೇಳಿದರು.ಕ್ರೀಡಾ ನಿಯಮಗಳನ್ನು ಅನುಸರಿಸುವ ಮೂಲಕ ಎಲ್ಲರೂ ಸಂತೋಷದಿಂದ ಕ್ರೀಡೆಗಳಲ್ಲಿ ಭಾಗವಹಿಸಿ, ಈ ಕ್ರೀಡೆಗಳು ತಮ್ಮ ಜೀವನದಲ್ಲಿ ಅವಿಸ್ಮರಣೀಯವಾಗಿ ಉಳಿಯಲಿ. ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸಾಧನೆ ಮಾಡಿ ಎಂದು ಹೇಳಿದರು.
ವಿಶೇಷಚೇತನರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕು ನಿರ್ವಹಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷ ಚೇತನರು ಯಾವುದೇ ಕಷ್ಟಕರ ಹಾಗೂ ಕ್ಲಿಷ್ಟ್ಟಕರ ಪರಿಸ್ಥಿತಿಯಲ್ಲಿ ಧೃತಿಗೆಡದೆ ಧೈರ್ಯದಿಂದ ಮುನ್ನಡೆಯಬೇಕು. ತಮ್ಮ ಯಾವುದೇ ಸಮಸ್ಯೆಗಳಿದಲ್ಲಿ,ತಮ್ಮನ್ನು ಹಾಗೂ ಸಂಬಂಧಿಸಿದ ಇಲಾಖೆ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೇಳಿದರು.ಡಾ.ಜಾವೆದ್ ಜಮಾದಾರ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಸಮಾಜದಲ್ಲಿ ಗುರುತಿಸಿಕೊಳ್ಳಬಹುದಾಗಿದೆ.ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ. ನಿರಂತರ ಪರಿಶ್ರಮ, ಸಮಯ ಪರಿಪಾಲನೆ ಕೌಶಲ್ಯಗಳ ರೂಢಿಸಿಕೊಳ್ಳುವಿಕೆ ಕ್ರೀಡಾ ಸಾಧನೆಗೆ ಪೂರಕವಾಗಿ ಪ್ರೇರಕವಾಗಿವೆ. ಪರಸ್ಪರ ಸಹಕಾರ ಮನೋಭಾವನೆ ಹೊಂದಿ,ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಎಂದು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆಂಪಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ, ಸಂಜೀವ ಖೋತ್, ಸುಮಿತ ಪಾಂಡಿಚೇರಿ, ವಿನೋದ ಖೇಡ, ನಿಮಿಷಾಚಾರ್ಯ, ಮಹೇಶ ಮುಧೋಳ, ವಿಠ್ಠಲ ಹಂಚನಾಳ, ಮಹೇಶ ತೋಟದ, ಶ್ರೀಪಾದ ಜೋಶಿ, ಜಿಲ್ಲಾ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.