ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಸೊರಬ
ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು.ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಅಥವಾ ಅಕ್ರಮಕ್ಕೆ ಅವಕಾಶ ನೀಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು.
ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ರಾಜ್ಯದ ಸಾರ್ವಜನಿಕರ ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಏಳ್ಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿತವಾಗಿವೆ ಎಂದು ಅವರು, ತಾಲೂಕಿನಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು, ಈಗಾಗಲೇ ೩೮೨ ಕೋಟಿ ರು. ವೆಚ್ಚ ಭರಿಸಲಾಗಿದೆ. ಬಡವರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿಯೇ ತಲುಪಿಸುವಂತಾಗಬೇಕು. ಅರ್ಹರಿಗೆ ಅನುಕೂಲವಾಗುವಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಶೇ.೧೦೦ಷ್ಟು ಪ್ರಗತಿಯಾಗಬೇಕು. ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಪ್ರಾಮಾಣಿಕತೆ ಇರಬೇಕು. ಅನರ್ಹರನ್ನು ದೂರ ಇಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಾರಿಗೆ ಇಲಾಖೆಯವರು ಗಮನಹರಿಸಬೇಕು. ಈಗಾಗಲೇ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೊಸ ಮಾರ್ಗಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಿಗದಿತ ವೇಳೆ ಬಸ್ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಇಲಾಖೆಯದ್ದಾಗಿದೆ. ತಾಲೂಕಿನ ಜಂಬಳ್ಳಿ ಮಾರ್ಗದ ಬಸ್ ನಿಗದಿತ ವೇಳೆಗೆ ಬರುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬರುತ್ತಿದೆ. ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಖಾಸಗಿ ಬಸ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನಿಗದಿತ ವೇಳೆಗೆ ಬಸ್ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು, ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾಲಕಾಲಕ್ಕೆ ಫಲಾನುಭವಿಗಳಿಗೆ ತಲುಪಬೇಕು. ಪ್ರತಿ ಸಭೆಯಲ್ಲಿ ಸಮಸ್ಯೆಗಳು ಚರ್ಚೆಗೆ ಸೀಮಿತವಾಗುತ್ತಿವೆ. ಆದರೆ ಚರ್ಚೆಯಾದ ವಿಷಯಗಳು ಕಾರ್ಯರೂಪಕ್ಕೆ ಬರುತ್ತಿಲ್ಲ. ಇದು ಸಭೆಗೆ ಅಗೌರವ ತೋರಿದಂತೆ. ಸಂಬಂಧಪಟ್ಟ ಇಲಾಖೆ ಫಲಾನುಭವಿಗಳಿಗೆ ತೊಡಕಾಗದಂತೆ ನಿಗಾ ವಹಿಸಬೇಕು ಎಂದು ತಾ.ಪಂ. ಇಒ ಕೆ.ಜಿ. ಶಶಿಧರ್ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ತಾಪಂ ಇಒ ಶಶಿಧರ ಕೆ.ಜಿ., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಪ್ರಭಾಕರ ಶಿಗ್ಗಾ, ಮಂಜುನಾಥ್ ತಲಗಡ್ಡೆ, ಮುಖ್ತಿಯಾರ್ ಭಾಷಾ, ಸಂತೋಷ್ ಕೊರಕೋಡು, ಪ್ರವೀಣ್ ಶಾಂತಗೇರಿ, ಚಾಂದ್ ಸಾಬ್, ಜಯಶೀಲ, ಸುಜಾತಾ ಜೋತಾಡಿ, ವಿನಾಯಕ, ಮೆಸ್ಕಾಂ ಎಇಇ ಸತ್ಯಪ್ರಕಾಶ್, ಕೇಶವ, ಆಹಾರ ಇಲಾಖೆಯ ಯೋಗೇಶ್ ಸೇರಿದಂತೆ ಇತರರಿದ್ದರು.
------ಫೋಟೊ:೩೦ಕೆಪಿಸೊರಬ-೦೨ :
ಸೊರಬ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.