ಅರಣ್ಯ ಪ್ರದೇಶದ ಹೆಚ್ಚು ಒತ್ತುವರಿ ವಿರುದ್ಧ ಕ್ರಮ

| Published : Jan 26 2025, 01:33 AM IST

ಅರಣ್ಯ ಪ್ರದೇಶದ ಹೆಚ್ಚು ಒತ್ತುವರಿ ವಿರುದ್ಧ ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದೆಲ್ಲೆಡೆ ಅರಣ್ಯ ಪ್ರದೇಶ ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದೆ, 2015ರ ನಂತರದಲ್ಲಿ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಅರಣ್ಯ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಪ್ರದೇಶವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಸರ್ಕಾರದ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ರಾಜ್ಯದೆಲ್ಲೆಡೆ ಅರಣ್ಯ ಪ್ರದೇಶ ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದೆ, 2015ರ ನಂತರದಲ್ಲಿ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಅರಣ್ಯ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಪ್ರದೇಶವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಸರ್ಕಾರದ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ನಡೆದ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ನೊಳಂಬ ಲಿಂಗಾಯತ ಸಮುದಾಯದ ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್ ಅವರ ಪುತ್ರ, ಬೆಂಗಳೂರು ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ. ಸಿ. ಗೋವರ್ಧನ್ ಅವರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಡಟಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಪ್ರದೇಶವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅರಣ್ಯ ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ವತಿಯಿಂದ ಜಮೀನು ಖರೀದಿಸಲು ಮತ್ತು ಮಾರಾಟ ಮಾಡಲು ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿದೆ, ಉತ್ತಮ ಮಳೆ ಬೆಳೆಗೆ ಅರಣ್ಯ ಪ್ರದೇಶದ ಅಭಿವೃದ್ಧಿ ಹಾಗೂ ಸಂರಕ್ಷಣೆ ಬಹುಮುಖ್ಯವಾಗಿದೆ.

ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬಳಿಕ ಕೇಂದ್ರ ಸರ್ಕಾರ ನಮಗೆ ಅನುಮೋದನೆ ನೀಡಿದ ನಂತರ ಅರಣ್ಯ ಭೂಮಿ ಪಡೆಯಬೇಕು ಎಂಬ ನಿಯಮವಿದೆ, ಈ ಕಾಯ್ದೆಯನ್ನು ಉಲ್ಲಂಘಿಸುವಂತ್ತಿಲ್ಲ, ಒಂದು ವೇಳೆ ಉಲ್ಲಂಘಿಸಿದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂಬ ನಿಯಮ ಇದೆ, ಈ ನಿಟ್ಟಿನಲ್ಲಿ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು.

ತಾಲೂಕಿನ ಅರಣ್ಯ ಪ್ರದೇಶದಲ್ಲಿರುವ ಕರಡಿ ಮತ್ತು ಚಿರತೆಗಳು ಗ್ರಾಮದ ಒಳಗೆ ಪ್ರವೇಶಿಸುತ್ತಿದ್ದು ಕೆಲವರ ಪ್ರಾಣ ಹಾನಿ ಸಂಭವಿಸುತ್ತಿದೆ ಇದರ ಬಗ್ಗೆ ಅರಣ್ಯ ಇಲಾಖೆಯ ವತಿಯಿಂದ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ತಾಲೂಕು ಸೇರಿದಂತೆ ರಾಜ್ಯದೆಲ್ಲೆಡೆ ಕರಡಿ ಮತ್ತು ಚಿರತೆ ದಾಳಿಯಿಂದ ಯಾವ ಜೀವ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಯಾರೂ ಆತಂಕ ಪಡುವ ಅಗತ್ಯವಿಲ್ಲ, ಅರಣ್ಯ ಪ್ರದೇಶದ ಅಭಿವೃದ್ಧಿ ಹಾಗೂ ಉಳಿವಿಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಜತೆಗೆ ಅರಣ್ಯ ಪ್ರದೇಶದ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇರುತ್ತದೆ ಎಂದರು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಶಾಸಕ ಕೆ. ಎಂ. ಶಿವಲಿಂಗೇಗೌಡ, ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಷಡಾಕ್ಷರಿ, ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಿಂಗೇಶ್, ತಾಲೂಕು ಕಾಂಗ್ರೆಸ್ ಮುಖಂಡರಾದ ಗಂಜಿಗೆರೆ ಚಂದ್ರಶೇಖರ್, ಪಟೇಲ್ ಶಿವಪ್ಪ, ತಾಲೂಕು ನೊಳಂಬ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಬಾಂಧವರು ಸೇರಿದಂತೆ ಇತರರು ಉಪಸ್ಥಿತರಿದ್ದರು.