ಸಾರಾಂಶ
ಹಾವೇರಿ: ಸರ್ಕಾರಿ, ಅರಣ್ಯ ಹಾಗೂ ಖಾಸಗಿ ಪ್ರದೇಶಗಳಲ್ಲಿ ವಾಸಿಸುವ ಹಾಡಿ, ಹಟ್ಟಿ ತಾಂಡಾಗಳ ನಿವಾಸಿಗಳ ಜಾಗೆಯನ್ನು ಸಕ್ರಮಗೊಳಿಸಿ ಎಲ್ಲ ತಾಂಡಾ ವಾಸಿಗಳಿಗೆ ಪಟ್ಟಾ ನೀಡಲಾಗುವುದು. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನು ಮಾಡಲಾಗುವುದು. ಮೊದಲ ಹಂತದಲ್ಲಿ ಜಿಲ್ಲೆಯ ಚಿಕ್ಕಮಳ್ಳಳ್ಳಿ ತಾಂಡಾವನ್ನು ಕಂದಾಯ ಗ್ರಾಮಕ್ಕೆ ಆಯ್ಕೆ ಮಾಡಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಜಿಲ್ಲಾ ಬಂಜಾರ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಜರುಗಿದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಸಂತ ಶ್ರೀ ಸೇವಾಲಾಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಈಗಾಗಲೇ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಾಂಡಾವಾಸಿಗಳಿಗೆ ಪಟ್ಟಾ ನೀಡುವ ಕಾರ್ಯ ಆರಂಭಿಸಿದ್ದಾರೆ ಎಂದು ಹೇಳಿದರು.ಉದ್ಯೋಗ ಹುಡುಕಿ ವಲಸೆ ಹೋಗುವ ಬಂಜಾರ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಸೂರಗೊಂಡನಕೊಪ್ಪದಲ್ಲಿ ಬಂಜಾರ ವಸತಿ ಶಾಲೆ ನಿರ್ಮಾಣಕ್ಕಾಗಿ ರು.೪೨ ಕೋಟಿ ವೆಚ್ಚದ ಕ್ರಿಯಾಯೋಜನೆ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಬಂಜಾರ ಭವನ ನಿರ್ಮಾಣ ಮಾಡಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಬಂಜಾರ ಭವನ ನಿರ್ಮಾಣ ಮಾಡಲಾಗುತ್ತಿದೆ. ಅದೇ ರೀತಿ ತಾಂಡಾಗಳಲ್ಲಿ ಬಂಜಾರ ಭವನ ಬೇಡಿಕೆ ಸಲ್ಲಿಸಿದರೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದರು.
ಲಂಬಾಣಿ ಭಾಷೆಗೆ ಲಿಪಿ ತಯಾರಿಸುವ ನಿಟ್ಟಿನಲ್ಲಿ ಈಗಾಗಲೇ ಸಂಶೋಧಕರಾದ ಭಾಯಾ ನಾಯಕ್ ಅವರು ಲಂಬಾಣಿ ಭಾಷೆಯ ಎರಡು ನಿಘಂಟುಗಳನ್ನು ತಯಾರಿಸಿದ್ದಾರೆ. ಪ್ರಾಧ್ಯಾಪಕ ಡಾ. ಸಣ್ಣರಾಮ ಅವರು ಲಂಬಾಣಿ ಭಾಷೆ ಬೆಳವಣಿಗೆಯ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಮುಂದಿನ ಒಂದು ತಿಂಗಳೊಳಗಾಗಿ ಲಂಬಾಣಿ ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.ಸಮಾಜ ಬಾಂಧವರು ಸಂತ ಸೇವಾಲಾಲ್ರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ನಾಯಕರು ಸಂಘಟಿತರಾಗಬೇಕು. ಜಯಂತಿ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ಸಣ್ಣರಾಮ ಉಪನ್ಯಾಸ ನೀಡಿ, ಸಂತ ಶ್ರೀ ಸೇವಾಲಾಲ್ ಅವರು ತ್ರಿಕಾಲ ಜ್ಞಾನಿಗಳಾಗಿದ್ದರು ಹಾಗೂ ಬಂಜಾರ ಸಂಸ್ಕೃತಿ ಕೇಂದ್ರಬಿಂದುವಾಗಿದ್ದಾರೆ. ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಬಂಜಾರ ಸಮುದಾಯ ಬದುಕಬೇಕು ಎಂಬುದು ಅವರ ಆಶಯವಾಗಿತ್ತು. ಬಂಜಾರ ಯುವ ಸಮೂಹ ಸಂಘಟಿತರಾಗಬೇಕು ಹಾಗೂ ಶಿಕ್ಷಣವಂತರಾಗಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಉಜ್ವಲ ಭವಿಷ್ಯ ರೂಪಿಸಬೇಕು ಎಂದು ಕರೆ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ನಾಗರಾಜ ಮಾತನಾಡಿ, ಲಂಬಾಣಿ ಕಲೆ, ಸಂಸ್ಕೃತಿಗೆ ತನ್ನದೇ ಆದ ಇತಿಹಾಸ ಇದೆ. ಈ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಂಡು ಹಾಗೂ ಬೆಳೆಸಿಕೊಂಡು ಹೋಗಬೇಕು. ಸರ್ಕಾರಕ್ಕೆ ಶಿಕ್ಷಣಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಲಿಂಗಸಗೂರು ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಶಾಖಾ ಅನುಭವ ಮಂಟಪದ ಸಿದ್ಧಲಿಂಗ ಸ್ವಾಮಿಗಳು ಆಶೀರ್ವಚನ ನೀಡಿದರು. ಹುಬ್ಬಳ್ಳಿಯ ತಿಪ್ಪೇಶ ಮಹಾರಾಜರು, ಗುತ್ತಲ ತಾಂಡಾದ ನಾಗರಾಜ ಮಹಾರಾಜರು ಹಾಗೂ ದಾವಣಗೆರೆಯ ನಾಗರಾಜ ಮಹಾರಾಜರು, ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಲಮಾಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಎಂ.ಎಂ. ಮೈದೂರ, ಎಂ.ಎಸ್.ಕೋರಿಶೆಟ್ಟರ, ಲಕ್ಷ್ಮಣ ಲಮಾಣಿ, ನಾಗಪ್ಪ ಲಮಾಣಿ, ರಾಮಣ್ಣ ಲಮಾಣಿ, ಚಂದ್ರಪ್ಪ ಲಮಾಣಿ ಇತರರು ಉಪಸ್ಥಿತರಿದ್ದರು.ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ನಗರದ ಹುತಾತ್ಮ ಮಹದೇವ ಮೈಲಾರ ವೃತ್ತದಿಂದ ಸಂತ ಶ್ರೀ ಸೇವಾಲಾಲ್ ಭಾವಚಿತ್ರ ಮೆರವಣಿಗೆ ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಚಾಲನೆ ನೀಡಿದರು. ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಗಣೇಶ ಬಿಷ್ಟಣ್ಣನವರ ಇದ್ದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.