ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಉತ್ತಮ ವೈದ್ಯಕೀಯ ಸೇವೆ ನೀಡಲು ಆಗತ್ಯ ಕ್ರಮ ವಹಿಸಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ತುರ್ತು ಸಂದರ್ಭದಲ್ಲಿ ಸಹಾಯವಾಗುವಂತೆ ಸಿಎಸ್‌ಆರ್ ಅನುದಾನದಲ್ಲಿ 33 ಲಕ್ಷ ರು. ವೆಚ್ಚದ ಸುಸಜ್ಜಿತ ತುರ್ತುಚಿಕಿತ್ಸಾ ವಾಹನ ಹಾಗೂ ರಾಷ್ಟೀಯ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನವನ್ನು ಸಾರ್ವಜನಿಕ ಸೇವೆಗೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿಯೇ ತಾಲೂಕು ಆಸ್ಪತ್ರೆಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆ ಜೊತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ತಂದು ಸುಸಜ್ಜಿತ ಹೆರಿಗೆ ವಾರ್ಡ್, ನವಜಾತ ಶಿಶುಗಳ ತುರ್ತು ಚಿಕಿತ್ಸಾ ವಿಭಾಗ ಹಾಗೂ ಆಧುನಿಕ ಯಂತ್ರೋಪಕರಣದ ಮೂಲಕ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಆಧುನಿಕತೆಗೆ ತಕ್ಕಂತೆ ಡಿಜಿಟಲ್ ಎಕ್ಸ್ ರೇ, ಸ್ಕ್ಯಾನಿಂಗ್ ಸೆಂಟರ್ ಆರಂಭಿಸಲಾಗಿದೆ. ಥೈರಾಯ್ದ್, ಸೇರಿದಂತೆ ನೂರಕ್ಕೂ ಹೆಚ್ಚು ರಕ್ತ ಪರೀಕ್ಷೆಗಳನ್ನು ಒಂದೇ ಸೂರಿನಲ್ಲಿ ಮಾಡಲಾಗುತ್ತಿದೆ. ಡಯಾಲಿಸಿಸ್ ಯಂತ್ರಗಳನ್ನು ಹೆಚ್ಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೀಡುವಂತಹ ಆರೋಗ್ಯ ಸೌಲಭ್ಯವನ್ನು ತಾಲೂಕಿನಲ್ಲಿಯೇ ನೀಡಲಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಖಾಸಗಿ ಆಸ್ಪತ್ರೆಗೂ ಮೀಗಿಲಾಗಿ ಶುಚಿತ್ವ ಕಾಪಾಡಲಾಗುತ್ತಿದೆ. ನುರಿತ ತಜ್ಞ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೊರ ಜಿಲ್ಲೆಗಳಿಂದಲೂ ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯ ನೀಡಲಾಗುವುದು ಎಂದು ಭರವಸೆ ನೀಡಿದರು.

ದೂರದ ಗ್ರಾಮಗಳಲ್ಲಿರುವ ರೋಗಿಗಳಿಗೆ ಪ್ರಾಥಮಿಕ ಆರೋಗ್ಯ ಸಂಚಾರಿ ತುರ್ತು ಚಿಕಿತ್ಸಾ ವಾಹನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಾಲೂಕು ಅಸ್ಪತ್ರೆ ಸೇರಿದಂತೆ ಹೋಬಳಿ ಮಟ್ಟದ ಆಸ್ಪತ್ರೆಗಳಿಗೂ ಸಮರ್ಪಕ ತುರ್ತು ಚಿಕಿತ್ಸಾ ವಾಹನದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಮಕ್ಕಳ ತಜ್ಞ ಶಿವಸ್ವಾಮಿ, ಮನ್ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್, ಕೃಷ್ಣೇಗೌಡ, ತಾಲ್ಲೂಪಂ ಮಾಜಿ ಉಪಾಧ್ಯಕ್ಷ ಸಿ. ಮಾಧು, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಅಧ್ಯಕ್ಷ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ನಿರ್ದೇಶಕ ಕೆ.ಜೆ ದೇವರಾಜ್, ದಿಲೀಪ್‌ಕುಮಾರ್ ಸೇರಿದಂತೆ ಮತ್ತಿತರರಿದ್ದರು.