ಸಾರಾಂಶ
ತೀರ್ಥಹಳ್ಳಿ : ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗಳನ್ನು ಬಗೆಹರಿಸಿದರೆ ಬಹುತೇಕ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ. ಈ ಕಾರಣಕ್ಕಾಗಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಬೇಗುವಳ್ಳಿಯ ಗ್ರಾಪಂಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಲೆನಾಡಿನಲ್ಲಿ ಅರಣ್ಯ ಭೂಮಿ ಸಮಸ್ಯೆ ಗಂಭೀರವಾಗಿದೆ. ಗೋಮಾಳ, ಸೊಪ್ಪಿನಬೆಟ್ಟದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಕಂದಾಯ ಸಚಿವರೊಂದಿಗೆ ಚರ್ಚಿಸಿ ಶರಾವತಿ ಮುಳುಗಡೆ ಸಂತ್ರಸ್ತರಿಂದಲೇ ಭೂಮಿ ಹಕ್ಕಿನ ಬಗ್ಗೆ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು.
ಹೆದ್ದಾರಿ ಅಗಲೀಕರಣಕ್ಕೆ ಸಂಭಂದಿಸಿ ಮನೆ ಕೃಷಿ ಭೂಮಿ ಕಳೆದುಕೊಳ್ಳುವವರಿಗೆ ತಾರತಮ್ಯವಿಲ್ಲದೇ ಪರಿಹಾರ ನೀಡಲಾಗುವುದು. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ನಿಯಮವನ್ನು ಉಲ್ಲಂಘಿಸಲು ಸಾಧ್ಯವಿಲ್ಲಾ. ಹೆದ್ದಾರಿ ವಿಚಾರಕ್ಕೆ ಸಂಭಂಧಿಸಿ ನಾಡಿದ್ದು ಸೋಮವಾರ ಸಭೆಯ ಕರೆಯಲಾಗಿದ್ದು ಜಿಲ್ಲಾಧಿಕಾರಿಗಳ ಸಲಹೆಯನ್ನು ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಹೇಳಿದರು.
ಹಿಂದೆ ಶಾಲೆಗಳಿಗೆ ದಾನ ನೀಡಿರುವ ಭೂಮಿಗೆ ದಾನಪತ್ರ ಇದೆ. ಆದರೆ ದನ ನೀಡಿದವರ ಮೂರನೇ ತಲೆಮಾರಿನವರು ಈ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕಾಯ್ದೆಯನ್ನು ತರುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತೂದೂರು ಗ್ರಾಪಂ ಅಧ್ಯಕ್ಷೆ ಶಶಿಕಲಾ, ಬಿಇಒ ವೈ.ಗಣೇಶ್, ತೂದೂರು ಗ್ರಾಪಂ ಸದಸ್ಯರು, ಮುಡುಬಾ ರಾಘವೇಂದ್ರ, ಅಮರನಾಥ ಶೆಟ್ಟಿ, ಪಪಂ ಅಧ್ಯಕ್ಷ ರಹಮತ್ ಇತರರು ಇದ್ದರು.