ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಎಡೀಸಿ ಮಂಗಳ ಸೂಚನೆ

| Published : Aug 07 2025, 12:45 AM IST

ಸಾರಾಂಶ

ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು.

ಕೋಲಾರ: ದೇವರಾಜ ಅರಸುರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಎಡೀಸಿ ಮಂಗಳ ತಿಳಿಸಿದರು.

ಆ.೨೦ರಂದು ನಡೆಯುವ ದೇವರಾಜ ಅರಸುರವರ ೧೧೦ನೇ ಜಯಂತಿ ಕುರಿತು ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಆ.೨೦ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು, ಕಚೇರಿಗಳಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳಿಂದ ಜಯಂತಿಯಂದು ಬೆಳಗ್ಗೆ ೯.೩೦ ಸ್ತಬ್ಧಚಿತ್ರಗಳನ್ನು ಮಾಡಬೇಕು ನಂತರ ಟಿ.ಚನ್ನಯ್ಯ ರಂಗಮಂದಿರದಲ್ಲಿ ೧೦ ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಸಾಂಸ್ಕೃತಿಕ ಕಲಾ ತಂಡಗಳಾದ ಡೊಳ್ಳು ಕುಣಿತ, ತಮಟೆ ವಾದ್ಯ, ವೀರಗಾಸೆ ಇತ್ಯಾದಿ ತಂಡಗಳನ್ನು ನಿಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ತಿಳಿಸಿ, ಆಹ್ವಾನ ಪತ್ರಿಕೆಗಳ ಮುದ್ರಣ ಮಾಡುವ ಕುರಿತು ಹಾಗೂ ಶಿಷ್ಟಾಚಾರ ಪಾಲನೆ ಮಾಡುವಂತೆ ತಿಳಿಸಿದರು.

ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು ಎಂದರು.

೨೦೨೪- ೨೫ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತ್ಯುನ್ಯತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ಹೇಳಿದರು.