ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದ್ದು, ಕೇಂದ್ರದ ನಾಟಕ ಅಡಾಡೆಮಿ ಪಟ್ಟಿಯಲ್ಲಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಸೇರ್ಪಡೆಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಖ್ಯಾತ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಒತ್ತಾಯಿಸಿದ್ದಾರೆ.ನಗರದ ಪ್ರೆಸ್ಕ್ಲಬ್ನಲ್ಲಿ ಬುಧವಾರ ಫೆಬ್ರವರಿ ಮಾಹೆಯ ಮಂಗಳೂರು ಪ್ರೆಸ್ಕ್ಲಬ್ ಗೌರವ ಅತಿಥಿಯಾಗಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಸಂಗೀತ, ನೃತ್ಯ, ಯಕ್ಷಗಾನದಂತೆ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ನಶಿಸಿ ಹೋಗುತ್ತಿರುವ ಈ ಕಲೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ತರಬೇತಿ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿದೆ. ಇದಕ್ಕಾಗಿ ವ್ಯವಸ್ಥಿತ ಜಾದೂ ಕಾಲೇಜು ಸ್ಥಾಪನೆಯ ಅಗತ್ಯವಿದ್ದು, ಭಾರತದ ಎಲ್ಲ ಕಡೆಯಿಂದ ನುರಿತ ಜಾದೂಗಾರನ್ನು ಸೇರಿಸಿಕೊಂಡು ತರಬೇತಿ ಪ್ರದರ್ಶನದ ವ್ಯವಸ್ಥೆಯನ್ನು ರೂಪಿಸಬೇಕಾಗಿದೆ. ಬಹುತೇಕವಾಗಿ ವೃತ್ತಿಪರತೆಗಿಂತಲೂ ಹವ್ಯಾಸಿ ಕಲೆಯಾಗಿ ಉಳಿದಿರುವ ಜಾದೂವನ್ನು ನವರಸ ಪೂರ್ಣ ಭಾವದೊಂದಿಗೆ ರಂಗಭೂಮಿಯ ಕಲೆಯಾಗಿ ಬೆಳೆಸಬೇಕಾಗಿದೆ ಎಂದವರು ಅಭಿಪ್ರಾಯಿಸಿದರು.1998ರಿಂದ ತುಳುನಾಡಿನ ದೈವರಾಧಾನೆಯನ್ನು ಮುಖ್ಯ ವಿಷಯವನ್ನಾಗಿಸಿ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ವಿಸ್ಮಯ ತಂಡ ಇದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ನಮ್ಮ ಮಣ್ಣಿನ ಜನಪದ ಸ್ಪರ್ಶವನ್ನು ಜಾದೂವಿನ ತಂತ್ರಗಾರಿಕೆಯ ಜತೆ ಬೆಸೆದಾಗ ವೀಕ್ಷಕನ ಭಾವನೆಗಳನ್ನು ತಟ್ಟಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ನಮ್ಮ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯಕ್ರಮ ಸಂಯೋಜಕ ಆತ್ಮಭೂಷಣ್ ಇದ್ದರು.
ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು.ಜಾದೂ ಕಲೆಗೆ ಓದಿನ ಹವ್ಯಾಸ ಪ್ರೇರಣೆನನಗೆ 8ನೇ ತರಗತಿಯಿಂದಲೇ ಪುಸ್ತಕ ಓದುವ ಹುಚ್ಚು ಸಣ್ಣ ಪುಟ್ಟ ಮ್ಯಾಜಿಕ್ಗಳ ಬಗ್ಗೆ ಆಸಕ್ತಿ ಬೆಳೆಸಿತು. ದ್ವಿತೀಯ ಪಿಯುಸಿಯಲ್ಲಿ ಇರುವಾರ ಓದಿದ ಮ್ಯಾಜಿಕ್ ಫೋರ್ ದಿ ಬಿಗಿನರ್ಸ್ ಎಂಬ ಪುಸ್ತಕ ಓದಿನ ಜಾದೂವಿನ ಆಸಕ್ತಿಯನ್ನು ಇಮ್ಮಡಿಸಿತು. ಬಳಿಕ ಹವ್ಯಾಸಿ ಜಾದೂಗಾರರಾಗಿದ್ದ ಪ್ರದೀಪ್ ಅವರು ನನ್ನ ಗುರುವಾದರು. ಅವರು ಜಾದೂ ತಂತ್ರಗಾರಿಕೆಯನ್ನು ನನಗೆ ಹೇಳಿಕೊಟ್ಟಿದ್ದಲ್ಲದೆ, ಹಲವು ಪರಿಕರಗಳನ್ನೂ ನೀಡಿದರು. ಪದವಿ ಬಳಿಕ ಮುಂಗಾರು ಪತ್ರಿಕೆಯಲ್ಲಿ ಸುಮಾರು ಮೂರು ವರ್ಷಗಳ ಕಾಲ ಉಪಸಂಪಾದಕನಾಗಿದ್ದ ಸಂದರ್ಭ ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರಿಂದ ಜಾದೂವಿನ ನನ್ನ ಆಸಕ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಯಿತು ಎಂದು ಕುದ್ರೋಳಿ ಗಣೇಶ್ ಹೇಳಿದರು.