ಚಿಕ್ಕಮಗಳೂರುಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸೆ.೬ ರಂದು ನಗರದಲ್ಲಿ ನಡೆಯಲಿರುವ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸೆ.೬ ರಂದು ನಗರದಲ್ಲಿ ನಡೆಯಲಿರುವ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಸೂಚಿಸಿದರು.ನಗರದ ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇರ ನೇಮ ಕಾತಿ ಪರೀಕ್ಷೆ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಪರೀಕ್ಷೆ ಸೆಪ್ಟೆಂಬರ್ ೬ ರಂದು ನಗರದ ಬೇಲೂರು ರಸ್ತೆಯ ಎಸ್.ಟಿ.ಜೆ ಮಹಿಳಾ ಪಿಯು ಕಾಲೇಜು, ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಸವನಹಳ್ಳಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಮೂರು ಕೇಂದ್ರಗಳಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ ೧೨ಕ್ಕೆ ಮುಕ್ತಾಯಗೊಳ್ಳಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ. ಮುಂಜಾಗೃತಾ ಕ್ರಮ ವಾಗಿ ಅಭ್ಯರ್ಥಿಗಳ ತಪಾಸಣೆ ಮತ್ತು ಮುಖ ಗುರುತಿಸುವಿಕೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಯಾವುದೇ ಅಕ್ರಮಕ್ಕೆ ಆಸ್ಪದ ನೀಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸಮೀಪದ ಎಲ್ಲ ಜೆರಾಕ್ಸ್, ಸೈಬರ್ ಸೆಂಟರ್‌ಗಳನ್ನು ಪರೀಕ್ಷೆ ಮುಗಿವವರೆಗೆ ಕಡ್ಡಾಯವಾಗಿ ಮುಚ್ಚಬೇಕು. ಪ್ರತೀ ಕೇಂದ್ರದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಗೆ ತಿಳಿಸಿದರು.ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ನಕಲು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸ ಬೇಕು. ಕರ್ನಾ ಟಕ ಪರೀಕ್ಷಾ ಪ್ರಾಧಿಕಾರದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.ಸಭೆಯಲ್ಲಿ ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕಿ ಮಂಜುಳ, ಜಿಲ್ಲಾ ಖಜಾನಾಧಿಕಾರಿ ಓಂಕಾರಪ್ಪ, ಪೊಲೀಸ್ ಅಧಿಕಾರಿ ಅಭಯ ಪ್ರಕಾಶ್, ಬಿಇಒ ರುದ್ರಪ್ಪ, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರಾಂಶುಪಾಲರು,ಉಪನ್ಯಾಸಕರಿದ್ದರು.