ಸಾರಾಂಶ
ಲಕ್ಷ್ಮೇಶ್ವರ: ರಸ್ತೆಯಲ್ಲಿ ಪ್ರತಿನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲಿ ಹಲವು ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿರುವುದಕ್ಕೆ ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡದಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದರಿಂದ ನಿಮ್ಮ ಪ್ರಾಣ ರಕ್ಷಣೆ ಹಾಗೂ ಅಪಘಾತ ಆಗುವದನ್ನು ತಪ್ಪಿಸಲು ಸಾಧ್ಯ. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಇದರಿಂದ ಪ್ರಾಣಾಪಾಯ ತಪ್ಪಿಸಲು ಸಾಧ್ಯ. ಎಲ್ಲ ವಾಹನಗಳ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು. ರಸ್ತೆ ಸುರಕ್ಷತಾ ಹಾಗೂ ವಾಹನ ಚಲಾಯಿಸುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಕ್ರೈಂ ಪಿಎಸೈ ವಿ.ಜಿ. ಪವಾರ ಅವರು ಸಾರ್ವಜನಿಕರಿಗೆ ತಿಳಿಸಿಕೊಟ್ಟರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಚಾರಿ ಜಾಗೃತಿ ಜಾಥಾ ಮೂಲಕ ಮೂಡಿಸಿ ಅವರು ಮಾತನಾಡಿದರು.ವಾಹನ ಸವಾರರು ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಪಘಾತ ಸಂಭವಿಸುವುದನ್ನು ತಪ್ಪಿಸಲು ಸಾಧ್ಯವಾಗುತ್ತಿದೆ. ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ನಿಮ್ಮ ಕುಟುಂಬದ ಸುರಕ್ಷಿತಯ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೇಳಿದರು.
ಈ ವೇಳೆ ಪಟ್ಟಣದ ವಿವಿಧ ಕಾಲೇಜುಗಳ ಎನ್ ಸಿ ಸಿ ಕೆಡೆಟ್ಗಳು ಹಾಗೂ ಪೋಲಿಸ್ ಸಿಬ್ಬಂದಿಗಳು ಭಾಗವಹಿಸಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.