ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬ ನಾಗರಿಕರು ಮುಂದಾಗುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬ ನಾಗರಿಕರು ಮುಂದಾಗುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ವಿಶ್ವದಾದ್ಯಂತ ಇಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ದಿನಕ್ಕೆ ಇತಿಹಾಸವಿದೆ. ಭಾರತ ಸಂವಿಧಾನದ ಪ್ರಮುಖ ಆಶಯಗಳಾಗಿರುವ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಸಾಮಾಜಿಕ ನ್ಯಾಯ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಅಂಶಗಳನ್ನು ಪ್ರಜಾಪ್ರಭುತ್ವದಲ್ಲಿ ಅಡಕಗೊಳಿಸಲಾಗಿದೆ. ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಮಹತ್ವವನ್ನು ನಾವೆಲ್ಲರೂ ಅರಿಯಬೇಕು ಎಂದರು.

12ನೇ ಶತಮಾನದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಎಲ್ಲಾ ವರ್ಗಗಳ ಜನರನ್ನು ಒಟ್ಟುಗೂಡಿಸಿ ಅನುಭವ ಮಂಟಪದ ಮೂಲಕ ಮೊದಲ ಸಂಸತ್ತು ಸ್ಥಾಪಿಸಿದ್ದರು. ಅಮೇರಿಕಾದ ಅಬ್ರಹಾಂ ಲಿಂಕನ್ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಸರ್ಕಾರ ರಚಿಸಿ ಆಧುನಿಕ ಜಗತ್ತಿನ ಮೊದಲ ಪ್ರಜಾಪ್ರಭುತ್ವ ಜಾರಿಗೊಳಿಸಿದ್ದರು. ಭಾರತ ಸ್ವಾತಂತ್ರö್ಯದ ಬಳಿಕ ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಸಾಮಾಜಿಕ ನ್ಯಾಯದಡಿ ಎಲ್ಲರಿಗೂ ಸಮಾನತೆ ಒದಗಿಸಲು ಮುಂದಾದರು ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ವಿಶ್ವದಲ್ಲಿ ಪ್ರಜಾಪ್ರಭುತ್ವ ಆಡಳಿತ ಹೊಂದಿರುವ ಎಲ್ಲಾ ದೇಶಗಳು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿವೆ. ಭಾರತವು ಪ್ರಪಂಚದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನ ಹೊಂದಿರುವ ದೇಶವಾಗಿದ್ದು, ದೇಶದಲ್ಲಿ ನಾವೆಲ್ಲರೂ ಶಾಂತಿ, ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣವಾಗಿದೆ ಎಂದರು.

ಮುಖ್ಯ ಭಾಷಣ ಮಾಡಿದ ಭೋಗಾಪುರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಮಸಮುದ್ರ ಪುಟ್ಟಸ್ವಾಮಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ಎಸ್.ರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಸೋಮೇಶ್ವರ, ತಹಸೀಲ್ದಾರ್ ಬಿ. ಗಿರಿಜಾ, ಇತರರು ಹಾಜರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.