ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಸಮಾಜದಲ್ಲಿ ಕಷ್ಟದಲ್ಲಿ ಇರುವವರಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಆಸರೆಯಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಭೈರವೈಕ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾವೂರಿನ ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ಗುರುವಾರ ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾತನಾಡಿ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ತ್ಯಾಗದ ಬದುಕು ಬೇಕು ಹೊರತು ಭೋಗದ ಬದುಕಲ್ಲ. ಎಲ್ಲ ವೈಜ್ಞಾನಿಕತೆಯ ಹಿಂದೆ ಅಧ್ಯಾತ್ಮದ ತಳಹದಿ ಇದೆ ಎಂದು ಹೇಳಿದರು.ಇದೇ ವೇಳೆ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ರಜತ ತುಲಾಭಾರ ನೆರವೇರಿತು. ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಬೆಳಗಾವಿ ಹುಕ್ಕೇರಿ ಹಿರೇಮಠದ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ‘ಕರಾವಳಿಯ ಒಕ್ಕಲಿಗರು’ ಪುಸ್ತಕ ಬಿಡುಗಡೆಗೊಳಿಸಿದರು.ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಯತಿಗಳು ಸಾನಿಧ್ಯ ವಹಿಸಿದ್ದರು. ಶಾಸಕ ಡಾ.ವೈ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮಂಜುನಾಥ ಭಂಡಾರಿ, ರವಿಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ದ.ಕ. ಜಿಲ್ಲಾ ಎಸ್ಪಿ ಯತೀಶ್, ಶ್ರೀ ಆದಿಚುಂಚನಗರಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಎ. ಶೇಖರ್, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎನ್. ಎಸ್. ರಾಮೇಗೌಡ ಇದ್ದರು.