ಚನ್ನರಾಯಪಟ್ಟಣ: ಮುಂದಿನ ಪೀಳಿಗೆಯ ಆರೋಗ್ಯ ರಕ್ಷಿಸಲು ೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕು ಆಡಳಿತ, ವೈದ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ, ಲಯನ್ ಸೇವಾ ಸಂಸ್ಥೆ, ರೋಟರಿ ಸಂಸ್ಥೆ ವತಿಯಿಂದ ನಡೆದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ ಖಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ವಿದೇಶಗಳಿಂದ ಬರುವವರಿಂದ ಸೋಂಕು ಹರಡುವ ಅಪಾಯವಿರುವ ಕಾರಣ ಪ್ರತಿಯೊಬ್ಬ ಪೋಷಕರು ಲಸಿಕಾ ಅಭಿಯಾನಕ್ಕೆ ಸಹಕರಿಸುವಂತೆ ಮನವಿ ಮಾಡಿದರು.

ತಾಲೂಕು ಪೋಲಿಯೋ ಮುಕ್ತವಾಗಿದ್ದು, ಆಗತಾನೇ ಹುಟ್ಟಿದ ಮಗುವಿನಿಂದ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ತಪ್ಪದೇ ಹಾಕಿಸಬೇಕು. ಆರೋಗ್ಯ ಕಾರ್ಯಕರ್ತರು, ಪೋಷಕರು ಯಾವ ಮಗುವು ಹನಿಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಆ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಬಳಸಿಕೊಂಡು ಆರೋಗ್ಯ ಸೇವೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆಗೆ ಹೆಚ್ಚಿನ ಗಮನ ಹರಿಸಲಾಗಿದೆ. ಮಾಸಿಕ ಪ್ರಯೋಗ ಶಾಲೆಯಲ್ಲಿ ೧೨,೦೦೦ಕ್ಕೂ ಹೆಚ್ಚು ರಕ್ತ ಪರೀಕ್ಷೆ ಮತ್ತು ಸುಮಾರು ೨೦೦೦ ಹೆಚ್ಚು ಡಿಜಿಟಲ್ ಎಕ್ಸ್‌ರೆಗಳನ್ನು ಮಾಡಲಾಗುತ್ತಿದೆ. ಮಕ್ಕಳಿಗೆ ಲಸಿಕೆ ನೀಡಲು ಅನುಕೂಲವಾಗಲೆಂದು ಪ್ರತ್ಯೇಕ ಲಸಿಕಾ ಕೇಂದ್ರ ತೆರೆಯಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಇಬ್ಬರು ಪ್ರಸೂತಿ ತಜ್ಞರಿದ್ದು ಮಾಸಿಕ ೭೦ ಹೆರಿಗೆ ಆಗುತ್ತಿವೆ. ಕೊಠಡಿಗಳ ಅಗತ್ಯತೆ ಹೆಚ್ಚಾಗಿದ್ದು, ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಬಿ.ಆರ್. ಯುವರಾಜ್ ಮಾತನಾಡಿದರು. ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಪಿ.ತೇಜಸ್ವಿನಿ, ಡಾ ಮುರುಳಿ, ಡಾ. ಪ್ರವೀಣ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಬಾಲು ನಾಗಸಮುದ್ರ, ಮೋಹನ್ ಕಲ್ಕೆರೆ ಇತರರಿದ್ದರು.